ಲೋಕಸಭಾ ಚುನಾವಣೆ ಅವಧಿ ಹತ್ತಿರ ಬಂತೆಂದರೆ ಸಾಕು, ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯಗಳು ಉಂಟಾಗಿರುವುದನ್ನು ಇತಿಹಾಸ ನಮಗೆ ತಿಳಿಸಿಕೊಡುತ್ತದೆ. ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುವುದು ಸ್ಪಷ್ಟವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.
“2001ರಲ್ಲಿ ಎಲ್.ಕೆ ಅಡ್ವಾಣಿ ಅವರು ಗೃಹ ಸಚಿವರಾಗಿದ್ದಾಗ ಸಂಸತ್ ಮೇಲೆ ದಾಳಿ ನಡೆದಿತ್ತು. ಕಳೆದ ಚುನಾವಣೆ ಸಂದರ್ಭದಲ್ಲಿ ಭದ್ರತಾ ವೈಫಲ್ಯದ ಪರಿಣಾಮ ಪುಲ್ವಾಮ ಗಡಿಯ ಒಳಗೆ ಬರೋಬ್ಬರಿ 300 ಕೆ.ಜಿ.ಯಷ್ಟು ಆರ್ಡಿಎಕ್ಸ್ ಪ್ರವೇಶಿಸಿತ್ತು. ಅದರ ಸ್ಪೋಟದಿಂದ ನಮ್ಮ ಸೈನಿಕರು ಬಲಿಯಾದರು. ಅಚ್ಚರಿ ಎಂದರೆ ಈವರೆಗೂ ಕೂಡಾ ಪುಲ್ವಾಮ ಗಡಿಯಲ್ಲಿ ಆರ್ಡಿಎಕ್ಸ್ ಹೇಗೆ ಬಂತು ಎಂಬುದರ ಬಗ್ಗೆ ಯಾವ ತನಿಖೆಯೂ ಆಗಿಲ್ಲ” ಎಂದು ಆರೋಪಿಸಿದ್ದಾರೆ.
“ಇದೀಗ ಮತ್ತೆ ಲೋಕಸಭೆಯೊಳಗೆ ಭದ್ರತಾ ವೈಫಲ್ಯದಿಂದಾಗಿ ಆತಂಕ ಸೃಷ್ಟಿ ಆಗಿದೆ. ಒಂದು ವೇಳೆ ಲೋಕಸಭೆಯಲ್ಲಿ ಏನಾದರೂ ದೊಡ್ಡ ಅನಾಹುತ ಘಟಿಸಿದ್ದರೆ ಅದಕ್ಕೆ ಯಾರು ಜವಾಬ್ದಾರಿ? ಭದ್ರತಾ ದೃಷ್ಟಿಯಿಂದ ಸಂಸದ ಪ್ರತಾಪ್ ಅವರನ್ನು ತನಿಖೆಗೆ ಒಳಪಡಿಸಬೇಕು ಮತ್ತು ಇದರ ಹಿಂದಿನ ನೈಜ ಕಾರಣಗಳನ್ನು ಪತ್ತೆ ಹಚ್ಚಬೇಕು” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸತ್ ಮೇಲೆ ದಾಳಿ: ನಜರ್ಬಾದ್ ನಟರಾಜ್ ಖಂಡನೆ
“ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ದೇಶದ ಸಂಸತ್ ಭವನದ ಮೇಲೆ ದಾಳಿ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ” ಎಂದು ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ತಿಳಿಸಿದ್ದಾರೆ.
“22 ವರ್ಷಗಳ ಹಿಂದೆ ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. ಅಂದು ಕೂಡ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಂಸತ್ ಘಟನೆಯ ಆರೋಪಿ ಎಸ್ಎಫ್ಐನವರೆಂದು ಅಪಪ್ರಚಾರ; ಕಾನೂನು ಕ್ರಮಕ್ಕೆ ಎಸ್ಎಫ್ಐ ಆಗ್ರಹ
“ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕನಿಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ” ಎಂದರು.
“ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.