ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ, ಸೀಟು ಹಂಚಿಕೆ ಕುರಿತ ಮಾತುಕತೆಯೊಂದು ನಡೆಯಲು ಬಾಕಿ ಇದೆ. ಈ ನಡುವೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿರುವುದು ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಂಸತ್ ಭವನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ದೇವೇಗೌಡರು ಖರ್ಗೆ ಅವರನ್ನು ಭೇಟಿ ಮಾಡಿ, ಸುಮಾರು ಹೊತ್ತು ಚರ್ಚೆ ನಡೆಸಿದರು.
ಈ ಭೇಟಿಯ ಬಗ್ಗೆ ಕಾಂಗ್ರೆಸ್ನ ಸಂಸದ ರಾಜೀವ್ ಶುಕ್ಲಾ, ‘ಎಕ್ಸ್’ ಟ್ವೀಟ್ ಮಾಡಿದ್ದು, “ಮಾಜಿ ಪ್ರಧಾನಿ ದೇವೇಗೌಡರು ಇಂದು ಸಂಸತ್ ಭವನದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದರು” ಎಂದು ತಿಳಿಸಿದ್ದಾರೆ. ಆದರೆ, ಯಾವ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಇದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಹೆಚ್ ಡಿ ದೇವೇಗೌಡ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಕೂಡ ರಾಜ್ಯಸಭಾ ಸದಸ್ಯರಾಗಿದ್ದಾರೆ.
Former pm HD deve Gowda met congress president Kharge ji in his chamber in parliament building and had long conversation. @INCIndia pic.twitter.com/svrHXf0J04
— Rajeev Shukla (@ShuklaRajiv) December 15, 2023
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಕೇವಲ 65 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಅಧಿಕಾರ ಕಳೆದುಕೊಂಡಿದ್ದರೆ ಮತ್ತು ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಜೆಡಿಎಸ್ ಕೇವಲ 19 ಸ್ಥಾನಗಳಲ್ಲಿ ಮಾತ್ರ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲುಂಡಿತ್ತು. ಜನರಿಗೆ ನೀಡಿದ್ದ ಗ್ಯಾರಂಟಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಗೆ ಏರಿತ್ತು.
ಈ ನಡುವೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ‘ಇಂಡಿಯಾ’ ಮೈತ್ರಿಕೂಟ ಮಾಡಿಕೊಂಡಿದ್ದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ಕೂಡ ಮೈತ್ರಿ ಮಾಡಿಕೊಂಡಿವೆ. ಆ ಮೂಲಕ ವಿಧಾನಸಭಾ ಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಮೈತ್ರಿ ಬಗ್ಗೆ ಉಭಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದಾರಾದರೂ, ಸೀಟು ಹಂಚಿಕೆ ಪ್ರಕ್ರಿಯೆಯ ಮಾತುಕತೆ ಇನ್ನೂ ನಡೆಯುತ್ತಲೇ ಇದೆ. ಸೀಟು ಹಂಚಿಕೆ ಪ್ರಕ್ರಿಯೆಯ ಬಳಿಕ ಏನೆಲ್ಲ ಬೆಳವಣಿಗೆ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.