ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿ ಕೆ ಶಿವಕುಮಾರ್; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ

Date:

Advertisements

ಉಪಮುಖ್ಯಮಂತ್ರಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ಕೋರಿದರು.

ಸಂಸತ್ ಭವನದಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಿವಕುಮಾರ್ ಅವರು ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಸಹಕಾರ ಕೋರಿದರು. ಕೇಂದ್ರ ಸಚಿವರಿಗೆ ಉಪಮುಖ್ಯಮಂತ್ರಿಗಳು ನೀಡಿದ ಮನವಿ ಪತ್ರದ ಸಾರಾಂಶ ಹೀಗಿದೆ.

ಬೆಂಗಳೂರಿನ ಮೂರು ಯೋಜನೆಗಳಿಗೆ ನೆರವು

Advertisements

ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು 60 ಕಿ.ಮೀ ಉದ್ದದ ನಗರ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಗರದೊಳಗೆ ಉತ್ತರದಿಂದ ದಕ್ಷಿಣ, ಪೂರ್ವದಿಂದ ಪಶ್ಚಿಮ ಕಾರಿಡಾರ್ ಮೂಲಕ ನಗರದೊಳಗಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಈ ಯೋಜನೆಯಲ್ಲಿ ಪ್ರತಿ ಕಿ.ಮೀ ಸುರಂಗ ರಸ್ತೆಗೆ 500 ಕೋಟಿ ರೂ.ನಂತೆ ಒಟ್ಟು 30 ಸಾವಿರ ಕೋಟಿ ವೆಚ್ಚ ತಗಲುವ ಅಂದಾಜು ಮಾಡಲಾಗಿದೆ. ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ 7 ಮತ್ತು 4ರ ಸಂಪರ್ಕ ಸಾಧಿಸುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅನುದಾನ ಮೀಸಲಿಡಬೇಕು.

ಮೆಟ್ರೋ ವಿಸ್ತರಣೆ ಮತ್ತು ಪ್ರವಾಹ ನಿಯಂತ್ರಣಕ್ಕೆ ಮೂಲಸೌಕರ್ಯ ಅಭಿವೃದ್ಧಿ

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೆಟ್ರೋ ಸಂಪರ್ಕ ಮಾರ್ಗವನ್ನು ವಿಸ್ತರಣೆಗೆ ಬಿಎಂಆರ್ ಸಿಎಲ್ ಯೋಜನೆ ರೂಪಿಸುತ್ತಿದ್ದು, ಇದಕ್ಕೆ ಭಾರತ ಸರ್ಕಾರದ ಅನುಮತಿ ಪಡೆಯಲು ನಿಮ್ಮ ಸಹಕಾರ ಬೇಕು. ಇನ್ನು ಅತಿಯಾದ ಮಳೆ ಸಮಯದಲ್ಲಿ ಬೆಂಗಳೂರಿನ ಕೆಲವು ಭಾಗಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ವಿಶ್ವ ಬ್ಯಾಂಕ್ ನಿಂದ 3 ಸಾವಿರ ಕೋಟಿಯಷ್ಟು ಆರ್ಥಿಕ ನೆರವನ್ನು ಕೋರಿದ್ದು, ಈ ಪ್ರಸ್ತಾವನೆ ಕೇಂದ್ರ ಹಣಕಾಸು ಸಚಿವಾಲಯ ತಲುಪಿದ್ದು ಈ ಪ್ರಸ್ತಾವನೆಗೆ ಅನುಮೋದನೆ ನೀಡಿ ವಿಶ್ವ ಬ್ಯಾಂಕ್ ನಿಂದ ಹಣಕಾಸಿನ ನೆರವು ಬರುವಂತೆ ಮಾಡಬೇಕು.

ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು

ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ಮುಂದಾಗಿದ್ದು, ಈ ಯೋಜನೆಯಿಂದ 67 ಟಿಎಂಸಿ ನೀರನ್ನು ಹಿಡಿದಿಟ್ಟು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ, ತಮಿಳುನಾಡಿನ ಪಾಲಿನ ನೀರು ಬಿಡುಗಡೆ ಹಾಗೂ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯ ಪೂರ್ವ ಕಾರ್ಯಸಾಧ್ಯತಾ ವರದಿಗೆ ಕೇಂದ್ರ ಜಲ ಆಯೋಗದಿಂದ ಅನುಮತಿ ಪಡೆಯಲಾಗಿದೆ. ಇನ್ನು ಈ ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಅನ್ನು 2019ರಲ್ಲಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ.

ಈ ಯೋಜನೆಯನ್ನು ಸುಪ್ರೀಂ ಕೋರ್ಟಿನ ತೀರ್ಪಿನ ಅನುಸಾರವಾಗಿ ತಮಿಳುನಾಡಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಜಾರಿ ಮಾಡಲಾಗುವುದು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅಗತ್ಯವಿರುವ ಅನುಮತಿಯನ್ನು ನೀಡುವಂತೆ ನಿರ್ದೇಶನ ನೀಡಿ ಎಂದು ಮನವಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ಕೃಷ್ಣಾ ಮೇಲ್ದಂಡೆ ಯೋಜನೆ

ಕೃಷ್ಣಾ ಮೇಲ್ದಂಡೆ ಯೋಜನೆಯು ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ-2 2010ರಲ್ಲಿ ತೀರ್ಪನ್ನು ಪ್ರಕಟಿಸಿದ್ದು ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರು ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಪ್ರಮಾಣದ ನೀರಿನ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಮೂಲಕ 130 ಟಿಎಂಸಿ ನೀರಿನ ಬಳಕೆಗೆ ನೆರವಾಗಲಿದೆ. ಇದರಿಂದ ವಿಜಯಪುರ, ಬಾಗಲಕೋಟೆ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಿದೆ.

ಈ ಯೋಜನೆಗೆ 16,900 ಕೋಟಿ ವೆಚ್ಚವಾಗಲಿದೆ. ನ್ಯಾಯಾಧೀಕರಣದ ಆದೇಶವಾಗಿ ದಶಕವೇ ಕಳೆದರೂ ಈ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ

ರಾಷ್ಟ್ರೀಯ ಜಲ ನೀತಿ ಅನುಸಾರ ನೀರನ್ನು ಬಹಳ ಪರಿಣಾಮಕಾರಿ ಬಳಕೆಗೆ ಕರ್ನಾಟಕ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಯೋಜನೆಯಿಂದ ಮಧ್ಯ ಕರ್ನಾಟಕ ಭಾಗದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಯ 2,25,525 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. 29.90 ಟಿಎಂಸಿಯಷ್ಟು ಅಂತರ್ಜಲ ಭರ್ತಿಗೆ ನೆರವಾಗಲಿದೆ.

2023-24ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಯೋಜನೆಗೆ ಕೇಂದ್ರ ಸರ್ಕಾರ ರೂ. 5,300 ಕೋಟಿ ಆರ್ಥಿಕ ನೆರವು ಘೋಷಣೆ ಮಾಡಿದ್ದು, ಇದುವರೆಗೂ ಯಾವುದೇ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಯೋಜನೆಯ ಪ್ರಗತಿ ಕುಂಠಿತವಾಗಿದೆ. ಹೀಗಾಗಿ ಈ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಪರಿಗಣಿಸಿ ಹಣಕಾಸಿನ ನೆರವು ನೀಡಬೇಕು. ಬಜೆಟ್ ನಲ್ಲಿ ಘೋಷಿಸಿರುವಂತೆ ರೂ. 5,300 ಕೋಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು.

ಮಹದಾಯಿ ಯೋಜನೆಗೆ ಅನುಮತಿ

ಮಹದಾಯಿ ನೀರು ವಿವಾದ ನ್ಯಾಯಾಧೀಕರಣವು 2018ರಲ್ಲಿ ತನ್ನ ಆದೇಶ ನೀಡಿದ್ದು, ಈ ಆದೇಶದಲ್ಲಿ ಕಳಸಾ ನಾಲೆಗೆ 1.72 ಟಿಎಂಸಿ ಹಾಗೂ ಬಂಡೂರಿ ನಾಲೆ ಯೋಜನೆಗೆ 2.18 ಟಿಎಂಸಿ ಕುಡಿಯುವ ನೀರನ್ನು ನಿಗದಿ ಮಾಡಿದೆ. ಈ ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕರಿಸಿದೆ. ಈ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಬಾಕಿ ಇದ್ದು, ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.

ಎತ್ತಿನಹೊಳೆ ಯೋಜನೆ

ಕರ್ನಾಟಕದ ಪೂರ್ವಭಾಗದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನ ಕೆಲವು ಭಾಗಗಳು ಬರ ಪೀಡಿತವಾಗಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಈ ಯೋಜನೆಗೆ ಮುಂದಾಗಿದ್ದೇವೆ. ಈ ಯೋಜನೆಗೆ ಒಟ್ಟು ರೂ. 23,251 ಕೋಟಿ ವೆಚ್ಚ ಅಂದಾಜು ಮಾಡಲಾಗಿದ್ದು, ಈವರೆಗೂ ರೂ. 14,698 ಕೋಟಿ ವೆಚ್ಚವಾಗಿದೆ. ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯಾಗಿದ್ದು, ಕೇಂದ್ರ ಸರ್ಕಾರ ಈ ಯೋಜನೆಗೆ ರೂ. 9177.32 ಕೋಟಿ (ಉಳಿಕೆ ಹಣ) ಅನುದಾನವನ್ನು ನೀಡಬೇಕು ಎಂದು ಡಿ ಕೆ ಶಿವಕುಮಾರ್ ಮನವಿ ಮಾ‌ಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X