ಶಿಕ್ಷಣ ಇಲಾಖೆ ಮೂಲಕ ಗ್ರಾಮೀಣ ಮಹಿಳೆಯರಿಗೆ ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಆಗಬೇಕು, ಇದಕ್ಕೆ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಸಮಿತಿಯಲ್ಲಿರುವ ಎಲ್ಲ ಇಲಾಖೆಗಳು ಕೆಲಸ ಮಾಡಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ರಾಯಚೂರು ನಗರದ ಜಿಲ್ಲಾ ಪಂಚಾಯತ್ ಜಲ ನಿರ್ಮಲ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸುಸ್ಥಿರ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಸಮಿತಿ ಸಭೆಯಲ್ಲಿ ಮಾತನಾಡಿದರು.
“ಮಹಿಳೆಯರು ಮುಟ್ಟನ್ನು ಆರೋಗ್ಯಕರವಾಗಿ ಹಾಗೂ ಸುರಕ್ಷಿತವಾಗಿ ನಿರ್ವಹಿಸುವ ಹಿತದೃಷ್ಟಿಯಿಂದ ರಾಯಚೂರು ಜಿಲ್ಲಾ ಮಟ್ಟದಲ್ಲಿ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಸಮಿತಿ ಮಾಡಿದ್ದು, ಸರ್ಕಾರಿ ಇಲಾಖೆಗಳಲ್ಲಿರುವ ಮಹಿಳೆಯರಿಗೆ ಜಾಗೃತಿ ಮೂಡುತ್ತಿದೆ. ಮುಖ್ಯವಾಗಿ ಗ್ರಾಮೀಣ ಮಹಿಳೆಯರಿಗೆ ಈ ಕುರಿತು ಅರಿವು ಮೂಡಿಸಬೇಕು” ಎಂದು ತಿಳಿಸಿದರು.
“ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಮಾಡಿದ್ದು, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಎಸ್ಆರ್ಎಲ್ಪಿಎಸ್ ಸಂಜೀವ ಪ್ರತಿನಿಧಿಗಳು ಸೇರಿದಂತೆ 12 ಇಲಾಖೆಗಳ ಅಧಿಕಾರಿಗಳಿದ್ದಾರೆ. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು” ಎಂದರು.
“ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾಹಿತಿ ಕೊರತೆ ಇದ್ದು, ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಮಿತಿಯಲ್ಲಿರುವ ಇಲಾಖಾ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು” ಎಂದು ಸೂಚಿಸಿಸಿದರು.
ಯುನಿಸೆಫ್ ಅಧಿಕಾರಿ ಪ್ರಭಾತ್ ಕಲ್ಕೂರು ಮಾತನಾಡಿ, “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯುನಿಸೆಫ್ ಸಂಸ್ಥೆ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಜಿಲ್ಲೆಯಲ್ಲಿ ಮುಟ್ಟಿನ ನಿರ್ವಹಣೆ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಮೂಲಕ ಮುಟ್ಟಿನ ಕಪ್ ವಿತರಣೆ ಮಾಡಲು ಮೈತ್ರಿ ಯೋಜನೆಯನ್ನು ಆರಂಭಿಸಿದೆ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಮಹಿಳಾ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಮುಟ್ಟಿನ ಕಪ್ ವಿತರಣೆ ಮಾಡಲಾಗಿದೆ. ಈ ಕುರಿತು ಸಮಿತಿ ಮೂಲಕ ಜಾಗೃತಿ ಮಾಡಿಸಬೇಕಾಗಿದೆ. ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲೆಗೆ ₹40 ಲಕ್ಷ ಅನುದಾನ ನೀಡಲಾಗಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ವೈ ಸುರೇಂದ್ರ ಬಾಬು, ಜಿಲ್ಲಾ ಆರ್ಸಿಎಚ್ ಡಾ ನಂದಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೇತನ್ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಮಹೇಶ ಪೋತೆದಾರ, ಪರಿಶಿಷ್ಟ ವರ್ಗಗಳ ಅಧಿಕಾರಿ ರಾಜೇಂದ್ರ ಜಲ್ದಾರ್ ಸೇರಿದಂತೆ ಯುನಿಸೆಫ್ ಸಂಸ್ಥೆ ಸಿಬ್ಬಂದಿಗಳು, ಅಧಿಕಾರಿಗಳು ಇದ್ದರು.
ವರದಿ : ಹಫೀಜುಲ್ಲ