ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್ ಆರ್ ಗವಿಯಪ್ಪ ತಿಳಿಸಿದ್ದಾರೆ.
ವಿಜಯನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ 2024ರ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಮಾತನಾಡಿದರು.
“ಪ್ರಸ್ತುತ ಬಾರಿಯ ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿಗೆ ಅವಕಾಶ ಮಾಡಿಕೊಡಲಾಗುವುದು. ಉತ್ಸವಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಸಮಯವಕಾಶ ಕಡಿಮೆ ಇರುವುದರಿಂದ ಯುದ್ಧೋಪಾದಿಯಲ್ಲಿ ಉತ್ಸವದ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಸೂಚಿಸಲಾಗಿದೆ” ಎಂದು ಶಾಸಕರು ತಿಳಿಸಿದರು.
“ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಬಡ್ಡಿ, ಕುಸ್ತಿ ಸೇರಿದಂತೆ ನಾನಾ ಸಾಹಸ ಕ್ರೀಡೆಗಳು, ರಂಗೋಲಿ, ಅಡುಗೆ ಸೇರಿದಂತೆ ನಾನಾ ಸ್ಪರ್ಧೆಗಳು ಇರಲಿವೆ. ಬಗೆಬಗೆಯ ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆ, ವಸ್ತು ಪ್ರದರ್ಶನ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜರುಗಲಿವೆ” ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಮಾತನಾಡಿ, “ಫೆಬ್ರವರಿ 2ರಿಂದ ಮೂರು ದಿನಗಳ ಕಾಲ ನಿಗದಿಯಾದ ಐತಿಹಾಸಿಕ ಹಂಪಿ ಉತ್ಸವವನ್ನು ಜನರ ನಿರೀಕ್ಷೆಯಂತೆ ನಡೆಸಲು ಅಗತ್ಯ ಯೋಜನೆ ರೂಪಿಸಿ ಕಾರ್ಯಪ್ರವೃತ್ತರಾಗಿದ್ದೇವೆ” ಎಂದು ಹೇಳಿದರು.
“ಉತ್ಸವ ನಡೆಸಲು ಉತ್ಸುಕರಾಗಿರುವ ಸ್ಥಳೀಯ ಶಾಸಕರು ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಲಹೆ ಪಡೆದು ಉತ್ಸವಕ್ಕೆ ಸಿದ್ಧತೆ ಮಾಡಲಾಗುವುದು. ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು” ಎಂದು ತಿಳಿಸಿದರು.
“ವಿರುಪಾಕ್ಷೇಶ್ವರನ ಸನ್ನಿಧಿಯಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದ್ದು, ಭರತನಾಟ್ಯ, ಕ್ಲಾಸಿಕಲ್ ಮ್ಯೂಸಿಕ್ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಮೂರು ಬೃಹತ್ ವೇದಿಕೆಗಳು, ಧ್ವನಿ, ಬೆಳಕು ಸೇರಿದಂತೆ ನಾನಾ ಕಾರ್ಯಕ್ರಮಗಳಿಗೆ ವೇದಿಕೆ ಯೋಜಿಸಲಾಗಿದೆ” ಎಂದರು.
“ಜನಾಕರ್ಷಣೆಗಾಗಿ ವಿಶೇಷ ಕಾರ್ಯಕ್ರಮ ಐತಿಹಾಸಿಕ ಉತ್ಸವಕ್ಕೆ ಸ್ವಯಂ ಪ್ರೇರಣೆಯಿಂದ ಆಗಮಿಸಲು ಇಚ್ಛಿಸುವ ಖ್ಯಾತ ಗಾಯಕರನ್ನು ಕರೆತರುವ ಯೋಜನೆ ಇದೆ” ಎಂದರು.
“ಹಂಪಿ ಉತ್ಸವದಲ್ಲಿ ಪ್ರತಿ ಬಾರಿ ಸಾಂಪ್ರದಾಯಿಕವಾಗಿ ನಡೆಸುವ ಅಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕುಸ್ತಿ ಹಾಗೂ ಕಲ್ಲು ಎತ್ತುವ ಸ್ಪರ್ಧೆ ಸೇರಿದಂತೆ ಎಲ್ಲ ಬಗೆಯ ಸ್ಪರ್ಧೆಗಳಿಗೆ ಉತ್ಸವದಲ್ಲಿ ಅವಕಾಶವಿರಲಿದೆ” ಎಂದರು.
“ಈ ಉತ್ಸವವು ಎಲ್ಲರನ್ನೊಳಗೊಳ್ಳುವ ನಿಟ್ಟಿನಲ್ಲಿ 25 ದಿನ ನಿರಂತರವಾಗಿ ಪ್ರಚಾರ ಮಾಡುತ್ತೇವೆ. ಉತ್ಸವಕ್ಕೆ ತಡವಾಗಿ ದಿನಾಂಕ ಘೋಷಣೆಯಾದರೂ ಕೂಡ ಉತ್ಸವವನ್ನು ಯಶಸ್ವಿ ಮಾಡುತ್ತೇವೆ. ಎಕೋ ಫ್ರೆಂಡ್ಲಿ ಬ್ಯಾನರ್ ಮತ್ತು ಪೋಸ್ಟರ್ ಹಾಕಲಾಗುವುದು” ಎಂದರು.
“ಹಂಪಿಯ ಇತಿಹಾಸದಲ್ಲಿ ಕನ್ನಡ ವಿಶ್ವವಿದ್ಯಾಲಯವು ಒಂದು ಕಿರೀಟವಿದ್ದಂತೆ. ವಿಶ್ವವಿದ್ಯಾಲಯದ ಕುಲಪತಿ ಸೇರಿದಂತೆ ಅಲ್ಲಿನ ಎಲ್ಲ ವಿಭಾಗಗಳ ಪ್ರಾಧ್ಯಾಪಕರೊಂದಿಗೆ ಚರ್ಚಿಸಿ, ಪುಸ್ತಕ ಮಳಿಗೆ ಸೇರಿದಂತೆ ವಿಭಿನ್ನ ಕಾರ್ಯಕ್ರಮ ರೂಪಿಸಲಾಗುವುದು. ಯುವಕರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ವರ್ಗದ ಜನಸಮುದಾಯವನ್ನು ಆಕರ್ಷಿಸಲು ಉತ್ಸವದಲ್ಲಿ ವೈವಿಧ್ಯಮಯವಾಗಿ ಕಾರ್ಯಕ್ರಮ ರೂಪಿಸಲಾಗುವುದು. ರೈತರಿಗಾಗಿ ಕೃಷಿ ಪ್ರದರ್ಶನ, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ, ಮಹಿಳೆಯರಿಗಾಗಿ ಕ್ಲಾಸಿಕಲ್ ಸಂಗೀತ ಸೇರಿದಂತೆ ನಾನಾ ಕಾರ್ಯಕ್ರಮ ರೂಪಿಸಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ
“ಸ್ಥಳೀಯರ ಸಂಚಾರಕ್ಕೆಂದೇ 80 ರಿಂದ 100 ಬಸ್ಗಳನ್ನು ಮೀಸಲಿಟ್ಟು ಜನರನ್ನು ಸೇರಿಸಲಾಗುವುದು. ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಹಯೋಗದೊಂದಿಗೆ ಶಾಲಾ ವಾಹನಗಳ ಮೂಲಕ ವಿದ್ಯಾರ್ಥಿಗಳನ್ನು ಸೇರಿಸಲಾಗುವುದು” ಎಂದರು.
“ಮಾಧ್ಯಮ ಪ್ರತಿನಿಧಿಗಳು, ಕಲಾವಿದರು, ಗಣ್ಯರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉತ್ಸವದಲ್ಲಿ ಅಚ್ಚುಕಟ್ಟಾಗಿ ಭಾಗಿಯಾಗಿ ಉತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗೊಂದಲವಾಗದಂತೆ ಪಾಸುಗಳ ವಿತರಣೆ ಮಾಡಲಾಗುವುದು” ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಸದಾಶಿವ ಪ್ರಭು ಬಿ ಸೇರಿದಂತೆ ಇತರರು ಇದ್ದರು.
ವರದಿ : ಅಂಕಲೇಶ್