2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಮುಳಬಾಗಿಲು ಎಸ್ಸಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ, ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಪರಿಶಿಷ್ಟ ಜಾತಿಗಳಿಗೆ ವಂಚಿಸಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.
ಮಂಜುನಾಥ್ ಅವರು ಬುಡಗ ಜಂಗಮ (ಎಸ್ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಭೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು. ಆ ವರದಿಯ ವಿರುದ್ಧ ಮಂಜುನಾಥ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿರುವ ಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಮಂಜುನಾಥ್ ಅವರು ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಕಸಿಕೊಂಡಿದ್ದಾರೆ. ಇದು ಸಂವಿಧಾನಕ್ಕೆ ಎಸಗಿದ ಮೋಸವಾಗಿದೆ” ಎಂದು ಹೇಳಿದೆ.
“ಮಂಜುನಾಥ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಯಾವ ಕ್ರಮ ಕೈಗೊಳ್ಳಬೇಕು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ” ಎಂದು ಪೀಠವು ಹೇಳಿದೆ.
ಪ್ರಕರಣದ ಹಿನ್ನೆಲೆ
ಪ್ರಸ್ತುತ ಕೋಲಾರ ನಗರ ಕ್ಷೇತ್ರದ ಶಾಸಕರಾಗಿರುವ ಮಂಜುನಾಥ್ ಅವರು 2013ರ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕ್ಷೆತ್ರವು ಎಸ್ಸಿ ಮೀಸಲು ಕ್ಷೇತ್ರವಾಗಿದ್ದರಿಂದ ಅವರು ಜಾತಿ ಪ್ರಮಾಣಪತ್ರ ಸಲ್ಲಿಸಬೇಕಿತ್ತು. ಈ ವೇಳೆ, ಅವರು ತಾವು ಬುಡಗ ಜಂಗಮ (ಎಸ್ಸಿ) ಸಮುದಾಯಕ್ಕೆ ಸೇರಿದವರು ಎಂದು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಆದರೆ, ಅವರು ಎಸ್ಸಿ ಸಮುದಾಯಕ್ಕೆ ಸೇರಿದವರಲ್ಲ ಎಂದು ಆರೋಪಿಸಲಾಗಿತ್ತು. ಈ ವೇಳೆ, ತಾವು ಬುಡಗ ಜಂಗಮ ಸಮುದಾಯಕ್ಕೆ ಸೇರಿದವರ ಎಂಬುದನ್ನು ಸಾಬೀತುಪಡಿಸಲು ಮಂಜುನಾಥ್ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಶಾಸಕತ್ವನ್ನು 2018ರ ಏಪ್ರಿಲ್ನಲ್ಲಿ ಅಸಿಂಧುಗೊಳಿಸಿ ಹೈಕೋರ್ಟ್ ಅದೇಶಿಸಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಂಜುನಾಥ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅವರ ಜಾತಿ ಪ್ರಮಾಣ ಪತ್ರ ಪರಿಶೀಲನೆಯನ್ನು ಸುಪ್ರೀಂ ಕೋರ್ಟ್, ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ವಹಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಮಂಜುನಾಥ್ ಅವರ ಶಾಲೆ ದಾಖಲಾತಿಗಳನ್ನು ಪರಿಶೀಲಿಸಿತ್ತು. ಅಲ್ಲದೆ, ಅವರು ಬುಡಗ ಜಂಗಮ ಜಾತಿಗೆ ಸೇರಿವರಲ್ಲ. ಅವರು ಹಿಂದುಳಿದ ಭೈರಾಗಿ ಜಾತಿಗೆ ಸೇರಿದವರು ಎಂದು ವರದಿ ನೀಡಿತ್ತು.
ಅಲ್ಲದೆ, “ಸ್ವಾತಂತ್ರ್ಯ ಪೂರ್ವದಲ್ಲಿ ಕೋಲಾರದ ಗೆಜಿಟಿಯರ್ನಲ್ಲಿ ಬುಡಗ ಜಂಗಮ ಸುಮುದಾಯವನ್ನು ಮಾಲಾನ್ಯಾಸಿ, ಭೈರಾಗಿ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಆದರೆ, ಮಂಜುನಾಥ್ ಅವರ ಕುಟುಂಬ ಹಾಗೂ ಸಂಬಂಧಿಕರು ಇತ್ತೀಚಿನ ದಿನಗಳಲ್ಲಿ ಬುಡಗ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿಲ್ಲ. ಅವರು ಬುಡಗ ಜಾರಿಗೆ ಸೇರಿದವರಲ್ಲ” ಎಂದು ವಿವರಿಸಿತ್ತು.
ಸಮಿತಿಯ ವರದಿಯನ್ನು ಪ್ರಶ್ನಿಸಿ ಮತ್ತೆ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.