ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 38ನೇ ಸಮ್ಮೇಳನವು ಫೆಬ್ರವರಿ 3 ಮತ್ತು 4ರಂದು ನಡೆಯಲಿದೆ ಎಂದು ಸಮ್ಮೇಳನದ ಗೌರವ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಸಮ್ಮೇಳನಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ವಸತಿ ವ್ಯವಸ್ಥೆ, ಊಟದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ. ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಸಮ್ಮೇಳನ ಯಶಸ್ವಿಗೆ ಶ್ರಮಿಸೋಣ” ಎಂದು ಜಿಲ್ಲೆಯ ಪತ್ರಕರ್ತರಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ಮಾತನಾಡಿ, “ಸಮ್ಮೇಳನದ ತಯಾರಿಗೆ ಈಗಾಗಲೇ ಮೂರು ತಂಡಗಳನ್ನು ರಚಿಸಲಾಗಿದೆ. ಸರ್ಕಾರಿ ವ್ಯಾಪ್ತಿಯಲ್ಲಿ ಬರುವ ಗೆಸ್ಟ್ ಹೌಸ್ನಲ್ಲಿ 45 ರಿಂದ 50 ರೂಂಗಳನ್ನು ವಿಐಪಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಪಟ್ಟಿ ಮಾಡಲಾಗಿದೆ” ಎಂದರು.
“ರಾಜ್ಯ ಸೇರಿದಂತೆ ಬಾಂಗ್ಲಾ, ಬರ್ಮಾ, ಶ್ರೀಲಂಕಾದಿಂದ ಅತಿಥಿಗಳು ದಾವಣಗೆರೆ ಸಮ್ಮೇಳನಕ್ಕೆ ಬರಲಿದ್ದಾರೆ. ಅಲ್ಲದೇ ಸಾವಿರಾರು ಪ್ರತಿನಿಧಿಗಳು ಆಗಮಿಸಲಿದ್ದಾರೆ. ನಾವು ಮನೆಗೆ ಬಂದ ಅತಿಥಿಗಳಿಗೆ ಹೇಗೆ ಸ್ವಾಗತ ನೀಡುತ್ತೆವೆಯೋ ಅದೇ ರೀತಿಯಾಗಿ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳನ್ನು ಬರಮಾಡಿಕೊಂಡು ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಮೂಲಕ ನೆನಪಿನಲ್ಲಿ ಉಳಿಯುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, “ಮೈಸೂರು, ಮಂಗಳೂರು, ಕಲ್ಬುರ್ಗಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ನಡೆದ ಸಮ್ಮೇಳನಗಳು ಒಂದಕ್ಕಿಂತ ಒಂದು ಭಿನ್ನವಾಗಿ ನಡೆದು ನೆನಪಿನಲ್ಲಿ ಉಳಿಯುವಂತಹ ಸಮ್ಮೇಳನ ನಡೆದಿವೆ. ಅದೇ ರೀತಿಯಲ್ಲಿ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಮೂರು ದಶಕಗಳ ನಂತರ ನಡೆಯುವ ಸಮ್ಮೇಳನ ಕೂಡ ನನೆಪಿನಲ್ಲಿ ಉಳಿಯುವಂತೆ ಮಾಡ ಬೇಕಾಗಿದೆ. ಎಲ್ಲರ ಸಹಕಾರ ಅವಶ್ಯವಾಗಿದೆ” ಎಂದರು.
ಸಭೆಯಲ್ಲಿ ಎಸ್ಪಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಸಿಇಓ ಸುರೇಶ್ ಇಟ್ನಾಳ್, ಎಡಿಸಿ ಪಿ.ಎನ್.ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ರೇಣುಕಾ, ದೂಡಾ ಆಯುಕ್ತ ಬಸವನಗೌಡ ಕೊಟ್ಟೂರು, ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಸೀಲ್ದಾರ್ ಅಶ್ವತ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಸುಂಕದ್, ಸ್ಮಾರ್ಟ್ ಸಿಟಿ ಎಂಡಿ ವೀರೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರವಿಚಂದ್ರ, ವಾರ್ತಾ ಅಧಿಕಾರಿ ಧನಂಜಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಬಿ.ಲೋಕೇಶ್, ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಮಂಜು ನಾಥ್ ಏಕಬೋಟೆ, ಪ್ರಧಾನ ಕಾರ್ಯ ದರ್ಶಿ ಎ.ಫಕೃದ್ದೀನ್. ಖಜಾಂಚಿ ಎನ್.ವಿ.ಬದರಿನಾಥ್, ಕಾರ್ಯದರ್ಶಿ ಜೆ.ಎಸ್.ವೀರೇಶ್, ಉಪಾಧ್ಯಕ್ಷ ಎಚ್. ಎನ್.ಪ್ರಕಾಶ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಪ್ಪ, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ.ಒಡೆಯರ್. ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಸಿ.ವರದರಾಜ್, ಮಧು ನಾಗರಾಜ್, ಕಾರ್ಯದರ್ಶಿ ಎ.ಎನ್.ನಿಂಗಪ್ಪ, ಹಿರಿಯ ಪತ್ರಕರ್ತ ಬಿ.ಎನ್.ಮಲ್ಲೇಶ್, ಪಿಆರ್ ಒ ಡಿ.ರಂಗನಾಥ್ ರಾವ್, ಸಂಯುಕ್ತ ಕರ್ನಾಟಕ ಸ್ಥಾನಿಕ ಸಂಪಾದಕ ಮಂಜುನಾಥ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ.ನವೀನ್, ಹಿರಿಯ ಪತ್ರಕರ್ತರಾದ ಎಚ್.ಬಿ.ಮಂಜುನಾಥ್, ಬಾ.ಮ.ಬಸವರಾಜಯ್ಯ, ಮಂಜು ಯಳನಾಡು, ಬಸವರಾಜ ದೊಡ್ಡಮನಿ, ನಾಗರಾಜ ಬಡದಾಳ್, ತಾರನಾಥ್, ರಮೇಶ್ ದಾರ್ ಸೇರಿದಂತೆ ಪತ್ರಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.