ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ಆಡಳಿತ ಸಹಯೋಗದಲ್ಲಿ ದೇವನಹಳ್ಳಿ ತಾಲೂಕಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಸರ್ಕಾರವು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ, ಸದೃಢರನ್ನಾಗಿ ಮಾಡಲು ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದವರ ಜೀವನ ಸುಧಾರಣೆ ಕಂಡಿದ್ದು, ಆರ್ಥಿಕವಾಗಿ ಸಬಲರಾಗಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಉಚಿತ ಬೆಳಕು, ಸುಸ್ಥಿರ ಬದುಕು ಗೃಹಜ್ಯೋತಿಯ ಉದ್ದೇಶವಾಗಿದ್ದು, ಜಿಲ್ಲೆಯಲ್ಲಿ 3,54,304 ಮಂದಿ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹಸಿವು ಮುಕ್ತ ಕರ್ನಾಟಕ ಮಾಡುವ ಹಿತದೃಷ್ಟಿಯಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈವರೆಗೆ 1,99,979 ಮಂದಿ ಅರ್ಹ ಫಲಾನುಭವಿಗಳಿಗೆ ₹11,67,01,940ರಷ್ಟು ಹಣವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ” ಎಂದು ತಿಳಿಸಿದರು.
“ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯಿಂದ ದೇವನಹಳ್ಳಿ ತಾಲೂಕಿನಲ್ಲಿ ಬಿಎಂಟಿಸಿಯಲ್ಲಿ ಸುಮಾರು 6,91,292 ಮಂದಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಮೂಲಕ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ” ಎಂದರು.
“ಯುವನಿಧಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1,591 ಮಂದಿ ನಿರುದ್ಯೋಗಿಗಳು ನೋಂದಣಿಯಾಗಿದ್ದು, ಇವರ ಬ್ಯಾಂಕ್ ಖಾತೆಗಳಿಗೆ ಅನುದಾನ ವರ್ಗಾಯಿಸಲು ಕ್ರಮ ವಹಿಸಲಾಗುತ್ತಿದೆ” ಎಂದರು.
“ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳಡಿ ಜಿಲ್ಲೆಯಲ್ಲಿ 17.57 ಲಕ್ಷ ಫಲಾನುಭವಿಗಳು ಇದರ ಲಾಭ ಪಡೆದಿದ್ದು, ₹663.36 ಕೋಟಿ ವೆಚ್ಚ ಮಾಡಲಾಗಿದೆ” ಎಂದು ಸಚಿವರು ಮಾಹಿತಿ ನೀಡಿದರು.
“ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಹಾಗೂ ಜನರಿಗೆ ಸೌಲಭ್ಯ ಮಾಹಿತಿ ನೀಡಲು ಪ್ರತಿ ಹೋಬಳಿ, ತಾಲೂಕು ಮಟ್ಟದಲ್ಲಿ ಸಮಾವೇಶ ಮಾಡಲಾಗುವುದು. ಅಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಗಳನ್ನು ಕಡ್ಡಾಯವಾಗಿ ಜನತೆಗೆ ತಲುಪಿಸಬೇಕು. ಪಂಚ ಯೋಜನೆಗಳಿಂದ ಜನ ವಂಚಿತರಾದರೆ ಸಂಬಂಧಿಸಿದ ಇಲಾಖೆ ಅಧಿಕಾರಿಯೇ ಹೊಣೆ. ಯೋಜನೆ ತಲುಪದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಸೂಕ್ತ ಕ್ರಮವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ರಾಜ್ಯ ಬಜೆಟ್ನಲ್ಲಿ ಕೃಷಿ ಕೂಲಿಕಾರರ ಬೇಡಿಕೆ ಘೋಷಣೆಗೆ ಆಗ್ರಹ
ಸಮಾವೇಶದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್ ನಟರಾಜ್, ದೇವನಹಳ್ಳಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಫಲಾನುಭವಿಗಳು, ಸಾರ್ವಜನಿಕರು ಇದ್ದರು.