ಮಹಿಳಾ ಸಂಘಗಳಿಗೆ ಡಿ.ಸಿ.ಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ. ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಮಹಿಳಾ ಸಂಘಗಳಿಗೆ ಸಾಲ ವಿತರಣೆ ಮತ್ತು ಮಾಹಿತಿ ನೀಡುವ ಕಾರ್ಯಕ್ತಮ ಉದ್ಘಾಟಿಸಿ ಮಾತನಾಡಿದರು.
“ರಾಜ್ಯದ 236 ತಾಲ್ಲೂಕಿನಲ್ಲಿ 223 ತಾಲ್ಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತದೆ ಎಂದು ತಿಳಿದ ಹಿನ್ನಲೆಯಲ್ಲಿ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ 2000 ರೂ ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಬರ ಎಂದು ತಿಳಿದ ತಕ್ಷಣ ಕಂದಾಯ ಸಚಿವರೊಂದಿಗೆ ಜಿಲ್ಲೆಗಳ ಪ್ರವಾಸ ಕೈಗೊಂಡು ರೈತರ ಕಷ್ಟಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ವರದಿ ನೀಡಲಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ
ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಮಾತನಾಡಿ, “ಗ್ಯಾರಂಟಿ ಯೋಜನೆಗಳು ಸಾರ್ವಜನಿಕರಿಗೆ ಉಪಯುಕ್ತವಾಗಿದ್ದು, ಸರ್ಕಾರ ಮನೆ ಬಾಗಲಿಗೆ ಯೋಜನೆಗಳನ್ನು ಒದಗಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉಳುವವರಿಗೆ ಭೂಮಿ ಎಂದು ರೈತರ ಪರವಾಗಿ ನಿಂತರು ಅವರು ಸದಾ ಎಲ್ಲರಿಗೂ ಮಾದರಿ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕ ರವಿ ಕುಮಾರ್, ದರ್ಶನ್ ಪುಣ್ಣಣಯ್ಯ, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.