- ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿ
- ಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಕೆ.ಎಮ್ ಶಿವಲಿಂಗೇಗೌಡ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದಿಂದ ಬನವಾಸೆ ರಂಗಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಹಾಸನ ವಿಧಾನಸಭಾ ಕ್ಷೇತ್ರದಿಂದ ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆ ಕೊನೆಯಾದಂತಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಶಾಸಕ ಪ್ರೀತಮ್ ಜೆ ಗೌಡ ಶುಕ್ರವಾರ ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಎಚ್.ಪಿ ಸ್ವರೂಪ್ ಅವರನ್ನು ಕಣಕ್ಕಿಳಿಸಿದ್ದು, ಕಳೆದ ಮೂರು ನಾಲ್ಕು ತಿಂಗಳಿಂದ ಇದ್ದಂತಹ ಟಿಕೆಟ್ ಹಂಚಿಕೆ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಕಾಂಗ್ರೆಸ್ನಿಂದ ನಿರೀಕ್ಷೆಯಂತೆ ಬನವಾಸೆ ರಂಗಸ್ವಾಮಿ ಕಣಕ್ಕಿಳಿದಿದ್ದಾರೆ.
ಸದ್ಯ, ರಂಗಸ್ವಾಮಿ ಅವರು ಇನ್ನೂ ಪ್ರಚಾರ ಆರಂಭಿಸಿಲ್ಲ. ಬಿಜೆಪಿ ಹಾಲಿ ಶಾಸಕ ಪ್ರೀತಂ ಗೌಡ ಈಗಾಗಲೇ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಸುತ್ತಿನ ಪ್ರಚಾರ ಮಾಡಿದ್ದಾರೆ. ಅಂತೆಯೇ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಕೂಡ ಟಿಕೆಟ್ ಘೋಷಣೆ ಮುನ್ನವೇ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೆ.ಎಂ ಶಿವಲಿಂಗೇಗೌಡ ಹಾಗೂ ಬಿಜೆಪಿಯಿಂದ ಜಿ.ವಿ ಬಸವರಾಜು ಹೆಸರು ಘೋಷಣೆಯಾಗಿದ್ದು, ಜೆಡಿಎಸ್ನಿಂದ ಎನ್.ಅರ್ ಸಂತೋಷ್ಗೆ ಟಿಕೆಟ್ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಅರಕಲಗೂಡು ವಿಧಾನಸಭಾ ಕ್ಷೇತ್ರದದಿಂದ ಘೋಷಣೆಯಾಗದ ಕಾಂಗ್ರೆಸ್ ಅಭ್ಯರ್ಥಿ
ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಮುಂದುವರೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡಮಗ್ಗೆ ಕೃಷ್ಣೇಗೌಡರನ್ನು ಕಣಕ್ಕಿಳಿಸಲು ಒಲವು ತೋರಿದ್ದರೆ, ಡಿ.ಕೆ.ಶಿವಕುಮಾರ್ ಅವರು ಮಾಜಿ ಪೊಲೀಸ್ ಅಧಿಕಾರಿ ಶ್ರೀಧರ್ ಗೌಡ ಅವರನ್ನು ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ವಿಧಾನಸಭಾ ಚುನಾವಣೆ | ನೀತಿ ಸಂಹಿತೆ ಜಾರಿ ಬಳಿಕ 150 ಕೋಟಿ ರೂ. ವಶ
ಈಗಾಗಲೇ ಅರಕಲಗೂಡು ಕ್ಷೇತ್ರದಲ್ಲಿ ಅಪಾರ ಜನಬೆಂಬಲವಿರುವ ಕೃಷ್ಣೇಗೌಡರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಹಲವು ಸುತ್ತಿನ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಟಿಕೆಟ್ ತಮಗೆ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನೂ ಬಿಡುಗಡೆ ಮಾಡಿದೆ. ಅದರಲ್ಲಿಯೂ ಅರಕಲಗೂಡು ವಿಧಾನಸಭಾ ಕ್ಷೇತ್ರ ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ತೀರ್ಮಾನವಾಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಎರಡು ಮೂರು ದಿನಗಳ ಬಳಿಕ ಉಳಿದ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ವರದಿಯಾಗಿದೆ.