ಹಾಸನ ತಾಲೂಕು ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸ.ನಂ. 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಆಗ್ರಹಿಸಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಹಾಸನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ಲಕ್ಷ್ಮೀಸಾಗರ ಗ್ರಾಮದ ಸ.ನಂ 35ರಲ್ಲಿ 26 ಬಡ ದಲಿತ ಮತ್ತು ಹಿಂದುಳಿದ ಕುಟುಂಬಗಳಿಗೆ ತಲಾ 0.26 ಎಕ್ಕರೆ ಭೂಮಿಯನ್ನು 1977 ರಲ್ಲಿ ಬಗರ್ ಹುಕುಂ ಸಾಗುವಳಿಯ ಆಧಾರದಲ್ಲಿ ಮಂಜೂರು ಮಾಡಿ ಹಂಗಾಮಿ ಸಾಗುವಳಿ ಜೀಟಿಯನ್ನು ನೀಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ನಿರಂತರವಾಗಿ ಈ ಎಲ್ಲಾ ಕುಟುಂಬಗಳು ಈ ಭೂಮಿಯನ್ನು ಸಾಗುವಳಿ ಮಾಡಿ ಬೆಳೆ ಬೆಳೆದು ಸ್ವಾಧೀನಾನುಭವದಲ್ಲಿರುತ್ತಾರೆ. ಪಹಣಿಗಳಲ್ಲೂ ಇವರುಗಳ ಹೆಸರುಗಳು ಬರುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.
1997ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಾಸನದ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ರೈತರು ಅನುಭವದಲ್ಲಿರುವ ಭೂಮಿಯಲ್ಲಿ ಸ್ವಲ್ಪ ಭಾಗವನ್ನು ಸ್ವಾಧೀನ ಪಡಿಸಿಕೊಂಡು ಪರಿಹಾರವನ್ನು ನೀಡಿದ್ದಾರೆ. ಆದರೆ, 26 ಕುಟುಂಬಗಳಿಗೆ ಮಂಜೂರಾಗಿದ್ದ ತಲಾ 0.26 ಎಕ್ಕರೆ ಜಾಗದಲ್ಲಿ ಕೆಐಡಿಬಿಯವರು ಭೂಸ್ವಾದೀನ ಮಾಡಿಕೊಂಡು ಉಳಿದಿರುವ ಭೂಮಿಯಲ್ಲಿ ರೈತರು ಈಗಲೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.
ಹಾಗಾಗಿ ರೈತರು ಈಗಲೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಉಳಿಕೆ ಭೂಮಿಯನ್ನು ಸರ್ವೆ ಮಾಡಿ, ಗಡಿಗಳನ್ನು ಗುರುತಿಸಿ, ಹದ್ದು ಬಸ್ತ್ ಮೂಲಕ ಪೋಡಿ ಮಾಡಿಕೊಡಿ ಎಂದು ರೈತ ಸಂಘ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದೆ.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ದಲಿತ ಹಕ್ಕುಗಳ ಸಮಿತಿ ಮತ್ತು ಡಿವೈಎಫ್ಐ ಮುಖಂಡ ಪೃಥ್ವಿ ಎಂಜಿ, ಸಿಐಟಿಯು ಕಾರ್ಯದರ್ಶಿ ಅರವಿಂದ ಲಕ್ಷ್ಮೀ ಸಾಗರ ಗ್ರಾಮಸ್ಥರಾದ ಜಯಲಕ್ಷ್ಮಿ, ರಾಜೇಶ್, ಶ್ರೀನಿವಾಸ್, ಜಯಮ್ಮ, ಮೂರ್ತಿ, ಸ್ವಾಮಿ ಮುಂತಾದವರು ಭಾಗವಹಿಸಿದ್ದರು.