ಮುಂಬರುವ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪತ್ರ ಬರೆದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು. ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ಸಿಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ವೀರಶೈವ-ಲಿಂಗಾಯತರು 1999ರವರೆಗೆ ಕಾಂಗ್ರೆಸ್ನ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಎಸ್.ನಿಜಲಿಂಗಪ್ಪ, ಬಿ.ಡಿ. ಜತ್ತಿ, ಎಸ್.ಆರ್. ಕಂಠಿ, ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕ ನಾಯಕರು ಇದ್ದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ-ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬರಲಾಗಿದೆ.
ಇದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆ ಎಂದಿದ್ದಾರೆ.
ನಮ್ಮ ರಾಜ್ಯದವರೇ ಆದ ನಿಮಗೆ ಸಮುದಾಯದ ಬಗ್ಗೆ ಪ್ರತ್ಯೇಕವಾಗಿ ಹೇಳುವುದು ಏನಿಲ್ಲ. ಏಳು ದಶಕಗಳಿಂದ ಹತ್ತಿರದಿಂದ ಸಮುದಾಯ ಬಲ್ಲವರಾಗಿದ್ದೀರಿ. ಇದನ್ನು ಸರಿಪಡಿಸುವ ಶಕ್ತಿ ನಿಮಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.