ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ಕ್ರೀಡಾ ಸಿಟಿ (ಸ್ಪೋರ್ಟ್ಸ್ ಸಿಟಿ) ನಿರ್ಮಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.
ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, “ಮಾವಳ್ಳಿಪುರ ಬಳಿ 60 ಎಕರೆ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿಕೊಂಡಿದ್ದು, ಇದರ ಜೊತೆಗೆ ಇನ್ನೂ ಹೆಚ್ಚುವರಿಯಾಗಿ 40 ಎಕರೆ ಜಾಗ ನೀಡುವಂತೆ ಕೇಳಿಕೊಳ್ಳಲಾಗಿದೆ” ಎಂದರು.
“ಬೇಗನೇ ಸಂಪುಟ ಸಭೆ ಒಪ್ಪಿಗೆ ಪಡೆದುಕೊಂಡು ಸರಕಾರದಿಂದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಯಾವುದಾದರೂ ಸರಿ ಸದರಿ ಪ್ರದೇಶದಲ್ಲಿ ಸುಸಜ್ಜಿತವಾದ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಹಾಗೂ ಎಲ್ಲ ಕ್ರೀಡೆಗಳು ಒಂದೇ ವೇದಿಕೆಯಡಿ ಬರುವಂತ ಕ್ರೀಡಾ ಸಿಟಿ ನಿರ್ಮಾಣ ಮಾಡಲಾಗುವುದು” ಎಂದು ಭರವಸೆ ನೀಡಿದರು.
“ಕ್ರೀಡಾ ಸಿಟಿ ನಿರ್ಮಿಸಿದರೇ ನಿಮ್ಮನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಿಸುವುದಾಗಿ ಶಾಸಕ ವಿಶ್ವನಾಥ್ ಅವರು ಸಚಿವ ನಾಗೇಂದ್ರ ಅವರಿಗೆ ಹೇಳಿದರು. ಇದಕ್ಕೆ ಪ್ರತಿಯಾಗಿ ಸಚಿವ ನಾಗೇಂದ್ರ ಅವರು ಉದ್ಘಾಟನೆ ದಿನದಂದು ನಾವು ಕಬ್ಬಡ್ಡಿ ಆಡೋಣ ಎಂದರು. ಸದನ ನಗೆಗಡಲಲ್ಲಿ ತೇಲಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ
ಜಿಲ್ಲಾ ಮತ್ತು ತಾಲೂಕುಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ
ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ತಾಲೂಕುಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.
ಆನೇಕಲ್ ಶಾಸಕ ಬಿ.ಶಿವಣ್ಣ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, “ಆನೇಕಲ್ ತಾಲೂಕು ಕ್ರೀಡಾಂಗಣ ಅಭಿವೃದ್ಧಿಪಡಿಸುವುದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶಾಸಕ ಕೋರಿಕೆ ಮೇರೆಗೆ ಒಂದು ಬಾರಿ ಭೇಟಿ ನೀಡಿ ಪರಿಶೀಲಿಸಿ ಅನುದಾನ ಒದಗಿಸಿ ಅಭಿವೃದ್ಧಿಪಡಿಸಲಾಗುವುದು” ಎಂದರು.