“ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು” ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ” ಎಂದು ತಿಳಿಸಿದ್ದಾರೆ.
“ವಿರೋಧ ಪಕ್ಷಗಳು ಅಡ್ಡ ಮತದಾನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಬಿಜೆಪಿ-ಜೆಡಿಎಸ್ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.
ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು
ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮಂಗಳೂರು ಪ್ರಕರಣ | ಬಿಜೆಪಿ ಶಾಸಕರ ಮೇಲಿನ ಎಫ್ಐಆರ್ ಖಂಡಿಸಿ ರಸ್ತೆ ತಡೆ: ಸಂಘಪರಿವಾರದ ಕಾರ್ಯಕರ್ತರ ಬಂಧನ
ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.