ಕ್ರಿಮಿನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿರುವುದಾಗಿ ಎಚ್.ಡಿ ಕೋಟೆ ಪೊಲೀಸರು ತಿಳಿಸಿದ್ದಾರೆ.
“ರಾಜ್ಯ ಸರ್ಕಾರ ನೇಮಿಸಿದ ಅಧಿಕಾರಿಗಳು ಮೀಸಲು ಅರಣ್ಯ ರಚನೆಯ ಬಗ್ಗೆ ನೋಟಿಸ್ ನೀಡಿದ ಬಳಿಕ ಗಿರಿಗೌಡ ಫೆಬ್ರವರಿ 20ರಂದು ಕೀಟನಾಶಕ ಸೇವಿಸಿದ್ದರು. ಕೂಡಲೇ ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರು ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮದ ಸರ್ವೆ ನಂ. 8, 115, 132 ಮತ್ತು 156ರಲ್ಲಿ ರಚಿಸಲು ಉದ್ದೇಶಿಸಿರುವ ಮೀಸಲು ಅರಣ್ಯ ಪ್ರದೇಶದಿಂದ ತೊಂದರೆಗೊಳಗಾಗುತ್ತಿರುವ ರೈತರು ಮತ್ತು ಇತರರಿಂದ ಹಕ್ಕುಪತ್ರಗಳನ್ನು ಸ್ವೀಕರಿಸಲು ಸರ್ಕಾರ ನಿವೃತ್ತ ಕೆಎಎಸ್ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿತ್ತು.
“ರೈತರು ಮತ್ತು ಸಾರ್ವಜನಿಕರು ತಮ್ಮ ಪ್ರತಿಕ್ರಿಯೆಗಳನ್ನು ದಾಖಲೆಗಳೊಂದಿಗೆ ನೋಡಲ್ ಅಧಿಕಾರಿಗೆ ಸಲ್ಲಿಸಬಹುದು. ಇದಕ್ಕಾಗಿ ಅವರಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ.ಈ ನೋಟಿಸ್ಗಳನ್ನು ಇಲಾಖೆ ನೀಡಿಲ್ಲ” ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನೂರಾರು ರೈತರು ಶನಿವಾರ ಕೆ ಆರ್ ಆಸ್ಪತ್ರೆಯ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಿಧ ಬೇಡಿಕೆ ಇಡೇರಿಸುವಂತೆ ನೇಕಾರರ ಆಗ್ರಹ
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಪಿ ಮರಂಕಯ್ಯ ಮಾತನಾಡಿ, “1,200 ಎಕರೆಯಲ್ಲಿ ಕೃಷಿ ಮಾಡುತ್ತಿರುವ 100ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಿದ್ದಾರೆ. ಈ ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ” ಎಂದು ಅವರು ಹೇಳಿದರು.
ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಶಿವರಾಜು ಪಿ ಭೇಟಿ ನೀಡಿ, ರೈತರಿಂದ ಮನವಿ ಪತ್ರ ಸ್ವೀಕರಿಸಿದರು. ಯಾವುದೇ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ ಎಂದು ರೈತರಿಗೆ ಮನವಿ ಮಾಡಿದರು.