ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ನಡೆದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40 ಶೇ ಏರಿಕೆಯಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು. ನಾವು ಯುವ ನಿಧಿಯನ್ನೂ ಕೊಡ್ತೀವಿ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಭರವಸೆ ನೀಡಿದರು.
ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
