ಬೆಂಗಳೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. ಎರಡು ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ” ಎಂದು ಹೇಳಿದ್ದಾರೆ.
ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸದ ವಾಣಿಜ್ಯ ಮಳಿಗೆಗಳ ‘ವ್ಯಾಪಾರ ಪರವಾನಗಿ’ ಅಮಾನತು ಮಾಡಿ, ಇಂದಿನಿಂದ ಬೀಗ ಹಾಕಲು ಬಿಬಿಎಂಪಿ ನಿರ್ಧರಿಸಿತ್ತು.
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ…
— DK Shivakumar (@DKShivakumar) February 29, 2024
ಅಂಗಡಿ ಮುಂಗಟ್ಟುಗಳ ಮೇಲ್ಭಾಗದಲ್ಲಿ ಕನ್ನಡ ಪ್ರದರ್ಶಿತವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಲಾಗಿತ್ತು. ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಧಿಸೂಚನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ವಾಣಿಜ್ಯ ಮಳಿಗೆಗಳು ಫೆ.28ರೊಳಗೆ ನಾಮಫಲಕ ಗಳಲ್ಲಿ ಶೇ 60ರಷ್ಟು ಕನ್ನಡ ಅಳವಡಿಸಿಕೊಳ್ಳಲು ಸೂಚಿಸಿ, 55,187 ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು.
ಫೆ.28ರ ವೇಳೆಗೆ 52,134 ವಾಣಿಜ್ಯ ಉದ್ದಿಮೆಗಳು ಸೂಚನೆಯನ್ನು ಪಾಲಿಸಿವೆ. ಉಳಿದ 3,044 ವಾಣಿಜ್ಯ ಉದ್ದಿಮೆಗಳು ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರಾಜರಾಜೇಶ್ವರಿ ನಗರ ವಲಯದಲ್ಲಿ ಅತಿ ಹೆಚ್ಚು ಬಾಕಿ ಉಳಿದಿದ್ದು, ಯಲಹಂಕ, ಬೊಮ್ಮನಹಳ್ಳಿ ವಲಯ ನಂತರದ ಸ್ಥಾನದಲ್ಲಿವೆ.
