ಕೇವಲ ಒಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಇಡೀ ತುಮಕೂರು ಜಿಲ್ಲೆಗೆ ಅನ್ಯಾಯ ಮಾಡಿ ಎಕ್ಸ್ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಮುಖಂಡ, ಸಣ್ಣ ನೀರಾವರಿ ಇಲಾಖೆಯ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದರು.
ತುಮಕೂರಿನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಗುಬ್ಬಿಯಿಂದ ಬೈಪಾಸ್ ಮಾಡಿ ಎಕ್ಸ್ಪ್ರೆಸ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋಗುವುದರಿಂದ ಜಿಲ್ಲೆಯ ಇತರೆ ತಾಲೂಕುಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗಲಿದೆ. ಹಾಲಿ ಇರುವ ನಾಲೆಯ ಮೂಲಕ ನಿಗದಿಪಡಿಸಿರುವ ನೀರು ತೆಗೆದುಕೊಂಡು ಹೋಗಲು ನಮ್ಮ ತರಕಾರು ಇಲ್ಲ” ಎಂದರು.
“ಈ ಹಿಂದೆ ನಾನು ಜಿಲ್ಲಾ ಉಸ್ತುವಾರಿಯ ಜೊತೆಗೆ, ಸಣ್ಣ ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ ಮೇಲ್ಮನೆಯಲ್ಲಿ ಅನುಮೋಧನೆಯಾಗಿದ್ದ ಎಕ್ಸ್ಪ್ರೆಸ್ ಕೆನಾಲ್ ಯೋಜನೆಗೆ ಪ್ರತಿ ಪಕ್ಷ ಮತ್ತು ಆಡಳಿತ ಪಕ್ಷದ ಜನಪ್ರತಿನಿಧಿಗಳು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಅಲ್ಲದೆ ಡಾ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯ ಒಕ್ಕೊರಲ ನಿರ್ಣಯದಂತೆ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೊಗುವ ಎಕ್ಸ್ಪ್ರೆಸ್ ಕೆನಾಲ್ ಯೋಜನೆಯನ್ನು ರದ್ದು ಪಡಿಸಲಾಗಿತ್ತು. ಆದರೆ ಹೊಸ ಸರ್ಕಾರ ಬಂದ ಬಳಿಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಂಸದ ಡಿ ಕೆ ಸುರೇಶ್ ಹಾಗೂ ಕುಣಿಗಲ್ ಕ್ಷೇತ್ರದ ಶಾಸಕ ಡಾ ಎಚ್ ಡಿ ರಂಗನಾಥ್ ಅವರು ಸರ್ವಾಧಿಕಾರಿ ಧೋರಣೆಯಿಂದ ಜಿಲ್ಲೆಯ ಇತರೆ ತಾಲೂಕುಗಳಿಗೆ ಅನ್ಯಾಯವಾಗುವುದನ್ನು ಲೆಕ್ಕಿಸದೆ ಯೋಜನೆಯನ್ನು ಕೈಗೆತ್ತಿಕೊಳ್ಳಲು ಮುಂದಾಗಿದ್ದಾರೆ. ಒಂದು ವೇಳೆ ನಮ್ಮ ವಿರೋಧದ ನಡುವೆಯೂ ಯೋಜನೆ ಕೈಗೆತ್ತಿಕೊಂಡರೆ ಅನಿವಾರ್ಯವಾಗಿ ನ್ಯಾಯಾಂಗ ಹೋರಾಟಕ್ಕೆ ಮುಂದಾಗುವುದಾಗಬೇಕಾಗುತ್ತದೆ” ಎಂದು ಜೆ ಸಿ ಮಾಧುಸ್ವಾಮಿ ಹೇಳಿದರು.
“ಹೇಮಾವತಿ ಯೋಜನೆಯಿಂದ ಜಿಲ್ಲೆಗೆ ಹಂಚಿಕೆಯಾಗಿರುವ 24.8 ಟಿಎಂಸಿ ನೀರಿನ ಸಂಪೂರ್ಣ ಬಳಕೆಗೆ ಯೋಜನೆ ರೂಪಿಸಿದ್ದು, ಹೆಚ್ಚುವರಿ ನೀರಿಲ್ಲ. ಹಾಗಿದ್ದ ಮೇಲೆ ಯಾವ ಆಧಾರದಲ್ಲಿ ಈ ಯೋಜನೆ ರೂಪಿಸಿದ್ದಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಹಲವಾರು ಎಂವಿಸಿ(ಬಹುಗ್ರಾಮ ಕುಡಿಯುವ ನೀರಿನ ಯೋಜನೆ)ಗಳು ನೀರಿನ ಲಭ್ಯತೆ ಇಲ್ಲದೆ ಸೊರಗುತ್ತಿವೆ. ಬೆಳ್ಳಾವಿ ಏತ ನೀರಾವರಿ ಇನ್ನೂ ಆರಂಭವೇ ಆಗಿಲ್ಲ. ಇಂತಹ ಸಂದರ್ಭದಲ್ಲಿ ಮಧ್ಯದಿಂದ ನಾವು ನೀರು ತೆಗೆದುಕೊಂಡು ಹೋಗುತ್ತೇವೆಂದರೆ, ಇದನ್ನು ಜಿಲ್ಲೆಯ ಪ್ರತಿಯೊಬ್ಬರೂ ಪಕ್ಷಭೇದ ಮರೆತು ವಿರೋಧಿಸಬೇಕಿದೆ” ಎಂದು ಜೆ ಸಿ ಮಾಧುಸ್ವಾಮಿ ಹೇಳಿದರು.
“ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಅವರಿಗೂ ಈ ಯೋಜನೆಯ ಬಗ್ಗೆ ಸಹಮತವಿಲ್ಲ. ಆದರೆ ಅವರ ಧ್ವನಿಗೆ ಶಕ್ತಿ ಸಾಲದಾಗಿದೆ. ಹೇಮಾವತಿ ನೀರು ನಂಬಿಯೇ ಜಿಲ್ಲೆಯಲ್ಲಿ ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಜಲಜೀವನ್ ಮೀಷನ್ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ” ಎಂದು ತಿಳಿಸಿದರು.
“ಕುಣಿಗಲ್ ತಾಲೂಕಿಗೆ ಹೇಮಾವತಿ ಯೋಜನೆಯಲ್ಲಿ 2 ಟಿಎಂಸಿ ನೀರು ಹಂಚಿಕೆಯಾಗಿದೆ. ಇದರಲ್ಲಿ ಕುಣಿಗಲ್ ದೊಡ್ಡ ಕೆರೆ, ಮಾರ್ಕೋನಹಳ್ಳಿ ಜಲಾಶಯ ಹಾಗೂ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲಾಗುತ್ತಿದೆ. ನಮಗೆ ರಾಜಕೀಯ ಶಕ್ತಿ ಇದೆಯೆಂದು ತಮ್ಮ ಸ್ವಾರ್ಥಕ್ಕೆ ಇಡೀ ಜಿಲ್ಲೆಗೆ ಮೋಸ ಮಾಡುವುದು ಸರಿಯಲ್ಲ. ಸಾಯುವವರೆಗೂ ರಾಜಕಾರಣ ಮಾಡಲು ಸಾಧ್ಯವಿಲ್ಲ. ಇದನ್ನು ಅಧಿಕಾರದಲ್ಲಿರುವ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದರು.
“ನಾನೂ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ. ಆದರೆ ಟಿಕೇಟ್ಗಾಗಿ ಸುಬ್ರಮಣ್ಯ ಸ್ವಾಮಿಯ ಹಾಗೆ ದೇಶ ಸುತ್ತುವುದಿಲ್ಲ. ಗಣಪತಿಯ ಹಾಗೆಯೇ ಕೆಲಸ ಮಾಡುತ್ತೇನೆ. ಜಿಲ್ಲೆಯ ಇತಿಹಾಸದಲ್ಲಿಯೇ ಹೊರಗಿನವರು ಬಂದು ಗೆಲುವು ಸಾಧಿಸಿದ ಉದಾಹರಣೆ ಇಲ್ಲ. ಕೊದಂಡರಾಮಯ್ಯ, ಎ ಕೃಷ್ಣಪ್ಪ, ದೇವೇಗೌಡರೇ ನಮಗೆ ಸಾಕ್ಷಿ. ಗೆಲ್ಲಬೇಕೆಂಬ ಕಾರಣಕ್ಕೆ ಹೊರಗಿನವರಿಗೆ ಟಿಕೇಟ್ ನೀಡಿದರೆ ಸ್ಥಳೀಯ ನಾಯಕತ್ವ ಬೆಳೆಯುವುದು ಹೇಗೆ?, ರಾಜಕೀಯ ಧೃವೀಕರಣ ಎಂಬುದು ಇಂದಿರಾ ಕಾಂಗ್ರೆಸ್, ರಾಷ್ಟ್ರೀಯ ಕಾಂಗ್ರೆಸ್ ಆರಂಭವಾದ ದಿನದಿಂದಲೇ ಆರಂಭಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ಅಲ್ಲಿಯವರು ಇಲ್ಲಿಗೆ, ಇಲ್ಲಿಯವರು ಅಲ್ಲಿಗೆ ಹೋಗುವುದು ಸಹಜ. ಕೆಲವೊಮ್ಮೆ ನಾವು ನಂಬಿದ್ದ ಸಿದ್ದಾಂತಗಳಿಗೆ ರಾಜಿ ಅನಿವಾರ್ಯ. ಹಾಗೆಂದ ಮಾತ್ರಕ್ಕೆ ಸ್ವಾಭಿಮಾನ ಬಿಟ್ಟು ರಾಜಕಾರಣ ಮಾಡಲ್ಲ” ಎಂದು ಜೆ ಸಿ ಮಾಧುಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಾತಿಗಣತಿ ಅವೈಜ್ಞಾನಿಕ : ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸ್ವೀಕರಿಸಿರುವ ಅರ್ಥಿಕ, ಸಾಮಾಜಿಕ ಸಮೀಕ್ಷೆ(ಜಾತಿಗಣತಿ) ಅವೈಜ್ಞಾನಿಕವಾಗಿದೆ. ನಾವೆಲ್ಲರೂ ಮತಾಂತರಗೊಂಡ ಲಿಂಗಾಯಿತರು, ಮೂಲದಲ್ಲಿ ಯಾವುದೋ ಕಸುಬು ಮಾಡುತ್ತಾ ಜೀವನ ಮಾಡುತ್ತಿದ್ದವರು. ನೂರಾರು ವರ್ಷಗಳ ನಂತರ ನೀವು ಮೀಸಲಾತಿಗಾಗಿ ನಿಮ್ಮ ಮೂಲಕ ಜಾತಿಗೆ ಹೋಗಿ ಎನ್ನುವುದಾದರೆ ಹೇಗೆ ಸಾಧ್ಯ. ಅಲ್ಲದೆ ಸಮೀಕ್ಷೆ ಸರಿಯಾಗಿ ನಡೆದಿಲ್ಲವೆಂಬ ದೂರುಗಳೂ ಸಾಕಷ್ಟಿವೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರ ಸಂಖ್ಯೆ ಹೆಚ್ಚಿದೆ. ಅದಕ್ಕಾಗಿಯೇ ನಮ್ಮ ಸರ್ಕಾರವಿದ್ದಾಗ ಶೇ.18ರಷ್ಟಿದ್ದ ಅವರ ಮೀಸಲಾತಿ ಪ್ರಮಾಣವನ್ನು ಶೇ.24ಕ್ಕೆ ಹೆಚ್ಚಳ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಚುನಾವಣಾಧಿಕಾರಿಗಳ ಸಭೆ; ಸಂದರ್ಭೋಚಿತವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ
ಸುದ್ದಿಗೋಷ್ಟಿಯಲ್ಲಿ ಪಕ್ಷದ ಮುಖಂಡ ಎಂ ಬಿ ನಂದೀಶ್, ದಿಲೀಪ್ ಕುಮಾರ್, ಟಿ ಆರ್ ಸದಾಶಿವಯ್ಯ, ರಂಗಾನಾಯಕ್ ಸೇರಿದಂತೆ ಇತರರು ಇದ್ದರು.
