ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಲವು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ಗಳ ಜೊತೆಗೆ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ರಾಜ್ಯದಲ್ಲಿನ ಮೊದಲ ಬಸ್ ನಿಲ್ದಾಣ ಇದಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ದಾವಣಗೆರೆಯಲ್ಲಿ ನಿರ್ಮಾಣವಾಗಿರುವ ನೂತನ ಮುಖ್ಯ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೇತೂರು ರಸ್ತೆಯಲ್ಲಿನ ಬಸ್ ನಿಲ್ದಾಣವನ್ನು 1.20 ಎಕರೆ ಜಾಗದಲ್ಲಿ ರೂ.8.96 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ದಾವಣಗೆರೆಯಿಂದ ಪ್ರತಿನಿತ್ಯ 1400 ಕ್ಕಿಂತ ಹೆಚ್ಚು ಬಸ್ಗಳು ಬಂದು ಹೋಗುತ್ತವೆ. ಇಲ್ಲಿಗೆ ಆಗಮಿಸುವ ಬಸ್ಗಳ ಸಂಖ್ಯೆಯು ಹೆಚ್ಚಿದ್ದು ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಸರ್ಕಾರ ಬಂದು 15 ದಿನಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಜಾರಿಯಿಂದ ಮುಂದಿನ ದಿನಗಳಲ್ಲಿ ನಿಗಮದ ಬಸ್ಗಳಿಗೆ ಇಂಧನ ಭರಿಸಲು ಹಣವಿಲ್ಲದಂತಾಗುತ್ತದೆ ಎಂಬ ಭಾವನೆಯನ್ನು ನಿವಾರಣೆ ಮಾಡಿ ನಿಗಮವನ್ನು ಅತ್ಯುತ್ತಮವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ. ಶಕ್ತಿ ಬಂದಾಗಿನಿಂದ ರಾಜ್ಯದಲ್ಲಿ 160 ಕೋಟಿಗಿಂತಲೂ ಹೆಚ್ಚಿನ ಮಹಿಳೆಯರು ಪ್ರಯಾಣಿಸಿದ್ದು ಇವರಿಗೆ ಆರ್ಥಿಕವಾಗಿ ಶಕ್ತಿ ತುಂಬಲಾಗಿದೆ ಎಂದು ವಿವರಿಸಿದರು.
ದಾವಣಗೆರೆ ಬಸ್ ನಿಲ್ದಾಣಕ್ಕಾಗಿ ಶ್ರಮಿಸಿದ ಕಾರ್ಮಿಕ ನಾಯಕ ಮಾಜಿ ಶಾಸಕರಾದ ಪಂಪಾಪತಿಯವರ ಹೆಸರಿಡಬೇಕೆಂದು ಬೇಡಿಕೆ ಇದ್ದು ಈ ಬಗ್ಗೆ ನಿಗಮದ ಆಡಳಿತ ಮಂಡಳಿಯಲ್ಲಿ ನಿರ್ಧರಿಸಬೇಕಾಗಿದೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಸಾರಿಗೆ ನಿಗಮದಿಂದ ಸತತ 7 ವರ್ಷಗಳ ಕಾಲ ಅಪರಾಧ ರಹಿತ, ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ನೀಡಿದ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಬೇತೂರು ರಸ್ತೆಯಲ್ಲಿನ ಬಸ್ ನಿಲ್ದಾಣ ನಿರ್ಮಾಣವಾಗಿದ್ದು ಜಗಳೂರು, ಹರಪನಹಳ್ಳಿ ಭಾಗದ ಜನರಿಗೆ ಅನುಕೂಲವಾಗಲಿದೆ. ಮುಖ್ಯ ಬಸ್ ನಿಲ್ದಾಣವು ಸುಸಜ್ಜಿತವಾಗಿ ನಿರ್ಮಾಣವಾಗಿದೆ. ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೂ ಅನುಮೋದನೆ ನೀಡಿದ್ದು ಹಿಂದಿನ ಪ್ಲಾನ್ನಂತೆ ನಿರ್ಮಾಣ ಮಾಡದೆ ಇರುವುದರಿಂದ ಕೆಲವೊಂದು ಮಾರ್ಪಾಡಿನೊಂದಿಗೆ ಮುಂದಿನ ದಿನಗಳಲ್ಲಿ ಉದ್ಘಾಟನೆ ಮಾಡಿ ಖಾಸಗಿ ಬಸ್ಗಳು ಇಲ್ಲಿಂದಲೇ ಕಾರ್ಯಾಚರಣೆ ಮಾಡಲು ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಬಸವಂತಪ್ಪ, ಮೇಯರ್ ವಿನಾಯಕ್ ಬಿ.ಎಚ್, ಕೆ.ಎಸ್.ಆರ್.ಟಿ.ಸಿ. ನಿಗಮದ ಸಿಬ್ಬಂದಿ ಮತ್ತು ಜಾಗೃತ ವಿಭಾಗದದ ನಿರ್ದೇಶಕರಾದ ಕೆ.ನಂದಿನಿದೇವಿ, ಪಾಲಿಕೆ ಸದಸ್ಯರಾದ ಚಮನ್ಸಾಬ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಸ್ಮಾರ್ಟ್ಸಿಟಿ ವ್ಯವಸ್ಥಾಪಕ ನಿರ್ದೇಶಕ ವೀರೇಶ್ಕುಮಾರ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಕ ಶ್ರೀನಿವಾಸ್ಮೂರ್ತಿ, ವಿಭಾಗೀಯ ಸಂಚಾಲಕ ಫಕೃದ್ದೀನ್.ಡಿ, ಎಲೆಬೇತೂರು ಗ್ರಾ.ಪಂ ಅಧ್ಯಕ್ಷ ರೇವಣಸಿದ್ದಪ್ಪ ಹಾಗೂ ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
