ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ವಿವಿಧ ರಾಜಕೀಯ ಪಕ್ಷಗಳಿಗೆ ಮತ ಚಲಾಯಿಸುತ್ತಾರೆ. ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ. ನಾವು ಹಾಗೆ ಹೇಳುವುದು ಇಲ್ಲ. ಬಿಜೆಪಿಯನ್ನು ಎದುರಿಸಿ, ನಮ್ಮ ಶಕ್ತಿಗೆ ಅನುಗುಣವಾಗಿ ಗೆಲ್ಲಲು ತಂತ್ರ ರೂಪಿಸುತ್ತಿದ್ದೇವೆ ಎಂದರು.
ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀರಾಮ ಇದ್ದಾರೆ. ಶ್ರೀರಾಮನು ಬಿಜೆಪಿಗೆ ಮಾತ್ರ ಸೀಮಿತವಾಗಿಲ್ಲ. ಬಿಜೆಪಿಯವರು ರಾಮನ ಹೆಸರಿನಲ್ಲಿ ಮತದಾರರನ್ನು ಸೆಳೆಯಲು ಹೆಚ್ಚಿನ ಪ್ರಯತ್ನ ನಡೆಸಿದ್ದಾರೆ. ಆದರೆ, ಎಲ್ಲ ಪಕ್ಷದವರೂ ರಾಮನನ್ನು ಪೂಜಿಸುತ್ತಾರೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಸಮಯದಲ್ಲಿ ಅನೇಕರು ಮನೆಗಳ ಮೇಲೆ ಕೇಸರಿ ಧ್ವಜ ಹಾರಿಸಿದ್ದರು. ಅವರೆಲ್ಲರೂ ಬಿಜೆಪಿಯ ಮತದಾರರು ಎಂದರ್ಥವಲ್ಲ ಎಂದರು.
ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿನ ಅಸಮಾಧಾನ ಮುನ್ನೆಲೆಗೆ ಬಂದಿತ್ತು. ಈಗಲೂ ಅದು ಮುಂದುವರಿದಿದೆ. ಆ ಪಕ್ಷದಿಂದ ದೂರ ಸರಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಗೊಂಡರೆ ಸ್ವಾಗತಿಸುತ್ತೇವೆ ಎಂದರು.
ರಮೇಶ ಕತ್ತಿ ಕಾಂಗ್ರೆಸ್ ಸೇರುತ್ತಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ, ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬರಲು ಯಾವುದೇ ಅಡೆತಡೆ ಇಲ್ಲ. ಆದರೆ, ಅವರಿಗೆ ಟಿಕೆಟ್ ಕೊಡುವ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ʼಮೋದಿ ಗೆಲ್ಲಿಸಿ, ದೇಶ ಉಳಿಸಿ’ ಎಂದು ಅಭಿಯಾನ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಎಲ್ಲ ಪಕ್ಷದವರೂ ಒಂದಿಲ್ಲೊಂದು ತಂತ್ರ ಅನುಸರಿಸುತ್ತಾರೆ. ನಾವು ಸಂವಿಧಾನ ಉಳಿಸಿ, ಕಾಂಗ್ರೆಸ್ ಗೆಲ್ಲಿಸಿ ಎಂಬ ಅಭಿಯಾನ ನಡೆಸುತ್ತೇವೆ. ಬಿಜೆಪಿಯ ಹಿಂದುತ್ವದ ಅಜೆಂಡಾ ಎದುರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಬೆಳಗಾವಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಿಸಿಲ್ಲ. ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂದು ಕಾದು ನೋಡುತ್ತಿದ್ದೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನಮಗೂ ಸಂಬಂಧವಿಲ್ಲ. ಇನ್ನೂ ಕೆಲವು ಹಂತದ ಸಭೆ ಮಾಡಿ ಅಭ್ಯರ್ಥಿ ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.
