“ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರನ್ನು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ನ ಮೊದಲ ಆತ್ಮಹತ್ಯೆ ಪ್ರಯತ್ನ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರು ಹೀಗೆ ಉತ್ತರಿಸಿದರು.
“ಇದನ್ನು ನಾನು ನಿರೀಕ್ಷೆ ಮಾಡಿದ್ದೆ. ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಪಕ್ಷಕ್ಕೆ ಬಹಳ ಮುಜುಗರವಾಗಿದೆ. ಅವರ ಆಂತರಿಕ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಜೆಡಿಎಸ್ಗೆ ಕೆಲವು ಕ್ಷೇತ್ರಗಳಲ್ಲಿ ಸ್ವಂತ ಶಾಸಕರು, ಸಂಸದರು ಇದ್ದಾರೆ. ಅವರ ಶಕ್ತಿ ಪಕ್ಷಕ್ಕೆ ಬೇಕಾಗಿದೆ. ಆದರೆ ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲೂ ಬಿಜೆಪಿ ಇದೇ ರೀತಿ ಮಾಡಿಕೊಂಡು ಬಂದಿದೆ. ಇದು ಅವರ ಪಕ್ಷಗಳ ಆಂತರಿಕ ವಿಚಾರ. ಆ ಬಗ್ಗೆ ಅವರೇ ತೀರ್ಮಾನ ಮಾಡಿಕೊಳ್ಳಲಿ. ನನಗೂ ಅದಕ್ಕೂ ಸಂಬಂಧವಿಲ್ಲ” ಎಂದು ತಿಳಿಸಿದರು.
ಸದಾನಂದಗೌಡರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಲು ಆಪರೇಶನ್ ಮಾಡಲಾಗುತ್ತಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಒಂದು ಪಕ್ಷದಲ್ಲಿ ಟಿಕೆಟ್ ವಂಚಿತರಾದವರು ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವುದು ರಾಜಕೀಯದಲ್ಲಿ ಸಹಜ. ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಮೂಡಿಗೆರೆಯಲ್ಲಿ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದಿದ್ದಾಗ ಜೆಡಿಎಸ್ನಿಂದ ಸ್ಪರ್ಧೆ ಮಾಡಿದ್ದರು. ನಮ್ಮಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ನೀಡದಿದ್ದಾಗ ಜೆಡಿಎಸ್ನಿಂದ ಸ್ಪರ್ಧೆ ಮಾಡಿದ್ದರು. ಶೆಟ್ಟರ್, ಸವದಿಗೆ ಬಿಜೆಪಿಯಲ್ಲಿ ಅವಕಾಶ ಸಿಗದಿದ್ದಾಗ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಿಸಿದ್ದೇವೆ. ಯಾವುದೇ ಪಕ್ಷ ಇದಕ್ಕೆ ಹೊರತಾಗಿಲ್ಲ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ತಮಿಳುನಾಡು | ಪ್ರಧಾನಿ ಮೋದಿ ರೋಡ್ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡ ಬಿಜೆಪಿ: ತನಿಖೆಗೆ ಆದೇಶ
ಸದಾನಂದ ಗೌಡರ ಸೇರ್ಪಡೆಗೆ ಅವಕಾಶ ಇದೆಯೇ ಎಂದು ಕೇಳಿದಾಗ, “ನಮ್ಮ ತಂತ್ರಗಾರಿಕೆಯನ್ನು ನಾವು ಬಿಟ್ಟು ಕೊಡುವುದಿಲ್ಲ” ಎಂದು ಇದೇ ವೇಳೆ ಡಿ ಕೆ ಶಿವಕುಮಾರ್ ತಿಳಿಸಿದರು.
