ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ ಆಚರಿಸಲಾಯಿತು.
12ನೇ ಶತಮಾನದ ಬಸವಣ್ಣನವರ ತತ್ವಾದರ್ಶಗಳನ್ನು ಚಾಚೂ ತಪ್ಪದೇ ಪಾಲನೆ ಮಾಡುತ್ತಾ ಸಮಾಜದ ಉದ್ಧಾರಕ್ಕೆ ಸದಾ ತುಡಿಯುತ್ತಿದ್ದ ಆಧುನಿಕ ಬಸವಣ್ಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ನೇ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಸಹಸ್ರಾರು ಭಕ್ತರು ಸಾಕ್ಷಿಯಾದರು.
ನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.
ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ, ೧ಳ108 ಅಷ್ಟೋತ್ತರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿಸಿದರು.
ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರು ಪರಮಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸುವ ಮೂಲಕ ಆಶೀರ್ವಾದ ಪಡೆದರು. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ವಿವಿಧ ಬಗೆಯ ಹಣ್ಣುಗಳು, ಪುಷ್ಪಗಳಿಂದ ಅಲಂಕರಿಸಿದ್ದ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಪುತ್ಥಳಿ ಮೆರವಣಿಗೆ ಗದ್ದುಗೆ ಮಂದಿರದ ಮುಂಭಾಗದಿಂದ ಆರಂಭವಾದ ಶ್ರೀಗಳ ಕಂಚಿನ ಪುತ್ಥಳಿ ಹೊತ್ತ ರುದ್ರಾಕ್ಷಿ ಮಂಟಪದ ಮೆರವಣಿಗೆಗೆ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯುದ್ಧಕ್ಕೂ ನಂದಿಧ್ವಜ ಕುಣಿತ, ಕರಡಿ ವಾದ್ಯ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೋಡುಗರ ಗಮನ ಸೆಳೆದವು.
ಮಠದ ಆವರಣದಲ್ಲಿ ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಕಳಸ ಹೊತ್ತ ಸುಮಂಗಲಿಯರು, ಹರಗುರುಚರಮೂರ್ತಿಗಳು, ಭಕ್ತಾದಿಗಳು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
ಗದ್ದುಗೆ ದರ್ಶನ ಪಡೆದ ಗಣ್ಯರು
ಬೆಳಿಗ್ಗೆಯಿಂದಲೇ ಶ್ರೀಮಠಕ್ಕೆ ಭಕ್ತರು, ಗಣ್ಯರ ದಂಡು ಹರಿದು ಬರುತ್ತಿದ್ದು, ಹರಿದ್ವಾರ ಪತಂಜಲಿ ಯೋಗಪೀಠದ ಸ್ವಾಮಿ ರಾಮ್ದೇವ್ ಜೀ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ವಿ. ಸೋಮಣ್ಣ, ಸಂಸದ ಜಿ.ಎಸ್. ಬಸವರಾಜು, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಡಾ. ಮಂಜುನಾಥ್, ರುದ್ರೇಶ್, ಡಾ. ಪರಮೇಶ್ ಸೇರಿದಂತೆ ವಿವಿಧ ಮಠಾಧೀಶರುಗಳು ಶ್ರೀಗಳ ಗದ್ದುಗೆ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.
117 ಮಕ್ಕಳಿಗೆ ನಾಮಕರಣ
ಡಾ. ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ ವತಿಯಿಂದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿ, ಪದ್ಮಭೂಷಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೭ನೇ ಜಯಂತ್ಯೋತ್ಸವದ ಅಂಗವಾಗಿ 117 ಮಕ್ಕಳಿಗೆ ʼಶಿʼ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ನಾಮಕರಣ ಮಾಡಲಾಯಿತು.
ಈ ಉಚಿತ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವರಿಗೆ ಹೊಸ ತೊಟ್ಟಿಲು, ತೊಟ್ಟಿಲ ಹಾಸಿಗೆ, ತೊಟ್ಟಿಲ ದಿಂಬು ಹಾಗೂ ಶ್ರೀಗಳ ಭಾವಚಿತ್ರವನ್ನು ಉಚಿತವಾಗಿ ನೀಡಲಾಯಿತು.
6 ಕಡೆ ದಾಸೋಹ
ರಾಜ್ಯದ ವಿವಿಧೆಡೆಗಳಿಂದ ಶ್ರೀಮಠಕ್ಕೆ ಆಗಮಿಸಿದ್ದ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ವಸ್ತುಪ್ರದರ್ಶನ ಆವರಣ, ಪ್ರಾರ್ಥನಾ ಮಂದಿರ, ಹಳೆಯ ಮತ್ತು ಹೊಸ ಪ್ರಸಾದ ನಿಲಯ, ಸಾದರ ಕೊಪ್ಪಲು ಸೇರಿದಂತೆ 6 ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 7 ಗಂಟೆಯಿಂದ ಮಠದಲ್ಲಿ ದಾಸೋಹ ಆರಂಭವಾಗಿದ್ದು, ರಾತ್ರಿ 11 ಗಂಟೆಯವರೆಗೂ ದಾಸೋಹ ನಡೆಯಿತು.