ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ ಜಯ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಬಿಂಬಿಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದರು.
“ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆಗೆ ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ತಿಳಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ವೇಳೆಯೂ ಇದನ್ನು ತಿಳಿಸಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆಗಾಗಿಯೇ ಅನುಮತಿ ಕೇಳಿರುವಾಗ ಕಾಂಗ್ರೆಸ್ ಪಾತ್ರ ಇದರಲ್ಲಿ ಏನೂ ಇಲ್ಲ. ಜಯ ಸಿಗಲು ಕಾಂಗ್ರೆಸ್ನ ವಕೀಲರು ಏನೂ ವಾದ ಮಾಡಿಲ್ಲ” ಎಂದರು.
ಕನ್ನಡಿಗರ ಕೈಗೆ ಚಿಪ್ಪು ನೀಡಿದ ಡೇಂಜರ್ ಕಾಂಗ್ರೆಸ್ ಸರ್ಕಾರ!
ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @PRajeevBJP, ಮಾಜಿ ಶಾಸಕರಾದ ಶ್ರೀ ಅಖಂಡ ಶ್ರೀನಿವಾಸ್ ಮೂರ್ತಿ,… pic.twitter.com/GUSmJNeuix
— BJP Karnataka (@BJP4Karnataka) April 23, 2024
“ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲಾ ಅವರು ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾರೆ? ಇಲ್ಲಿ ಬಾಂಬ್ ಸ್ಫೋಟ ಆಗಿರುವಾಗ ನಿಮಗೆ ಮತ ಕೇಳಲು ಯಾವ ಅಧಿಕಾರ ಇದೆ? ಕೇಂದ್ರ ಸರ್ಕಾರ ಕ್ರಮ ವಹಿಸಿದ್ದರಿಂದಲೇ ಬರ ಪರಿಹಾರ ಹಲವಾರು ರಾಜ್ಯಗಳಿಗೆ ದೊರೆಯುತ್ತಿದೆ. ಈಗಾಗಲೇ ಬರ ಪರಿಹಾರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕಿತ್ತು. ಎಸ್ಡಿಆರ್ಎಫ್ನಿಂದ 700 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ರಾಜ್ಯ ಸರ್ಕಾರವೇ ನೀಡಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ” ಎಂದು ಅಶೋಕ್ ತಿಳಿಸಿದರು.
“2013-14 ರಲ್ಲಿ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ 9 ತಿಂಗಳು ತೆಗೆದುಕೊಂಡಿದ್ದರು. ಕೇಂದ್ರದಲ್ಲೀಗ ಬಿಜೆಪಿ ಇದೆ ಎಂಬ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಮೋದಿ ಸರ್ಕಾರ 7,940 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್ ಸಿಂಗ್ ಸರ್ಕಾರ 3,000 ಕೋಟಿ ರೂ. ನೀಡಿದೆ. ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ” ಎಂದು ದೂರಿದರು.
“ಕಾಂಗ್ರೆಸ್ ವಿರುದ್ಧ ಹಿಂದೂಗಳು ಕೆರಳುತ್ತಿದ್ದಾರೆ. ಹಿಂದೂಗಳ ರಕ್ತವನ್ನು ಮತಾಂಧರು ಹರಿಸುತ್ತಿದ್ದು, ಇದನ್ನು ಮರೆಮಾಚಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ನೇಹಾ ಹತ್ಯೆಯ ತನಿಖೆಯನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಲವ್ ಜಿಹಾದ್ ಹೇಳಿದ್ದಾರೆ. ಈ ಪ್ರಕರಣವನ್ನು ಸೂಕ್ತವಾಗಿ ತನಿಖೆ ಮಾಡಲು ಸಿಬಿಆಐಗೆ ವಹಿಸಬೇಕು” ಎಂದು ಇದೇ ವೇಳೆ ಅಶೋಕ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಜೀವ್ ಗೌಡ, ಅಖಂಡ ಶ್ರೀನಿವಾಸಗೌಡ, ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಉಪಸ್ಥಿತರಿದ್ದರು.
