“ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಮಧ್ಯೆ, ಈಗ ಬಿಡುಗಡೆ ಮಾಡಿರುವ ಪರಿಹಾರ ಮೊತ್ತ ಸಾಕು ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾಡದ್ರೋಹಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಘೋಷಿಸಿರುವ ಬಗ್ಗೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಹಣ ರಾಜ್ಯಕ್ಕೆ ಇನ್ನು ಬಂದಿಲ್ಲ. ಆದರೂ ಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಅವರು ಈ ಮೊತ್ತ ಸಾಕು ಎಂದಿದ್ದಾರೆ. ಇದು ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತವೇ ಹೊರತು, ಇಷ್ಟು ಸಾಕು ಎನ್ನಲು ಇದು ಅವರ ಮನೆ ಆಸ್ತಿಯಲ್ಲ. ಇಂತಹ ಹೇಳಿಕೆ ಕೊಟ್ಟಿರುವ ಕುಮಾರಸ್ವಾಮಿ ನಾಡದ್ರೋಹಿ” ಎಂದು ವಾಗ್ದಾಳಿ ನಡೆಸಿದರು.
“ನೀವು ಜನಪ್ರತಿನಿಧಿಯಾಗಿ ನಿಮ್ಮ ಮೈತ್ರಿ ಸರ್ಕಾರಕ್ಕೆ ಹೇಳಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡಬೇಕು. ಆದರೆ ಅವರು ಇಷ್ಟು ಪರಿಹಾರ ಸಾಕು ಎಂದು ಹೇಳಿದ್ದಾರೆ. ಇದು ಪಕ್ಷ ಅಥವಾ ರಾಜಕೀಯ ವಿಚಾರವಲ್ಲ. ರಾಜ್ಯಕ್ಕೆ ಆಗುತ್ತಿರುವ ದ್ರೋಹ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ” ಎಂದು ಡಿ ಕೆ ಶಿವಕುಮಾರ್ ಆರೋಪಿಸಿದರು.
“ನಮ್ಮ ರಾಜ್ಯದಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಸೆಪ್ಟೆಂಬರ್ 13, 2023ರಂದು ಸರ್ಕಾರ ಘೋಷಣೆ ಮಾಡಿತ್ತು. ಬರಗಾಲದ ಹಿನ್ನೆಲೆಯಲ್ಲಿ 46 ಲಕ್ಷ ಹೆಕ್ಟೇರ್ ಕೃಷಿ ಭೂಮಿ, 2.06 ಲಕ್ಷ ಹೆಕ್ಟೇರ್ ತೋಟಗಾರಿಕಾ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಒಟ್ಟಾರೆಯಾಗಿ 35 ಸಾವಿರ ಕೋಟಿಯಷ್ಟು ನಷ್ಟವಾಗಿದ್ದು, ಎನ್ಡಿಆರ್ ಎಫ್ ಮಾರ್ಗಸೂಚಿ ಅನುಸಾರ ಕರ್ನಾಟಕ ರಾಜ್ಯ ಸರ್ಕಾರ 2024ರ ಸೆಪ್ಟೆಂಬರ್ 22ರಂದು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ಬರ ಪರಿಹಾರ ನೀಡುವಂತೆ ಮನವಿ ಮಾಡಿತ್ತು” ಎಂದು ಡಿ ಕೆ ಶಿವಕುಮಾರ್ ವಿವರಿಸಿದರು.
“ಅಕ್ಟೋಬರ್ 25ರಂದು ನಮ್ಮ ಸರ್ಕಾರದ ಸಚಿವರುಗಳು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದರು. ನವೆಂಬರ್ 25ರಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕೇಂದರ ಹಣಕಾಸು ಸಚಿವರನ್ನು ಭೇಟಿ ಮಾಡಿ ತಕ್ಷಣವೇ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಡಿಸೆಂಬರ್ 19, 20ರಂದು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಪ್ರಧಾನಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು. 2024 ಜನವರಿ 20ರಂದು ಮುಖ್ಯಮಂತ್ರಿಗಳು ಮೋದಿ ಅವರಿಗೆ ಬರ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ” ಎಂದು ಡಿಸಿಎಂ ವಿವರಿಸಿದರು.
“ನರೇಗಾ ಯೋಜನೆಯಲ್ಲಿ 100 ದಿನಗಳ ಕೂಲಿ ದಿನಗಳನ್ನು 150ಕ್ಕೆ ಏರಿಕೆ ಮಾಡಬೇಕು ಎಂಬ ಅವಕಾಶವಿದ್ದರೂ ಕೇಂದ್ರ ಸರ್ಕಾರ ಮಾಡಿಲ್ಲ. ಇದು ಬೇಸರದ ವಿಚಾರ. ಇದರಿಂದ ನಮ್ಮ ರಾಜ್ಯಕ್ಕೆ ಬರಬೇಕಾಗಿದ್ದ ಅವಕಾಶವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇದನ್ನು ಮಾಡಿದ್ದರೆ ರಾಜ್ಯದ ಅನೇಕ ಕಾಮಗಾರಿಗಳಿಗೆ ಅವಕಾಶ ಇರುತ್ತಿತ್ತು. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದ ನೀಡದ ಕಾರಣ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೆವು. ನಂತರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಒಪ್ಪಿಗೆ ನೀಡಿತು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಕೇಂದ್ರ 3,454 ಕೋಟಿ ನೀಡಿದ್ದಾರೆ. ಇದು ಯಾವಾಗ ನಮ್ಮ ಖಾತೆಗೆ ಬರುತ್ತದೆಯೋ ಗೊತ್ತಿಲ್ಲ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
“ಕೇಂದ್ರ ಸರ್ಕಾರ ಎಲ್ಲ ವಿಚಾರದಲ್ಲೂ ರಾಜ್ಯಕ್ಕೆ ಚೊಂಬು ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ 5400 ಕೋಟಿ ಘೋಷಣೆ ಮಾಡಿದರೂ ರಾಜ್ಯಕ್ಕೆ ಹಣ ಯಾಕೆ ನೀಡಲಿಲ್ಲ. ಮಹದಾಯಿ, ಎತ್ತಿನಹೊಳೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲಿಲ್ಲ ಯಾಕೆ? ಗೆದ್ದರೆ ಒಂದೇ ತಿಂಗಳಲ್ಲಿ ಮೋಕೇದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎನ್ನುತ್ತಾರೆ. ನೀವು ಅವರ ಜತೆ ಕೈಜೋಡಿಸಿದ ದಿನವೇ ಮೇಕೆದಾಟು ಯೋಜನೆಗೆ ಸಹಿ ಹಾಕಿಸಬೇಕಿತ್ತು. ನಮ್ಮ ಹೋರಾಟದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ಅಧಿಕಾರ ಕೊಟ್ಟರೆ ಮಾತ್ರ ರಾಜ್ಯದ ಹಿತದ ಬಗ್ಗೆ ಯೋಚಿಸುತ್ತಾರೆ, ಇಲ್ಲದಿದ್ದರೆ ಯೋಚಿಸುವುದಿಲ್ಲವೇ?” ಎಂದು ಡಿಸಿಎಂ ಪ್ರಶ್ನಿಸಿದರು.
“ರಾಜ್ಯಕ್ಕೆ ಅನ್ಯಾಯ ಆಗಿದೆ, ರಾಜ್ಯ ಕೇಳಿರುವುದು 18 ಸಾವಿರ ಕೋಟಿ, ಕೇಂದ್ರ ಕೊಟ್ಟಿರುವ ಪರಿಹಾರ ತೃಪ್ತಿಯಿಲ್ಲ. ದಿನೇದಿನೆ ರಾಜ್ಯದ ಬಗ್ಗೆ ಘೋರ ಅನ್ಯಾಯವಾಗುತ್ತಿದೆ. ಬಿಜೆಪಿ ನಾಯಕರು ಕಳೆದ ನಾಲ್ಕು ದಿನಗಳಿಂದ ಸಿನಿಮಾ ನೋಡಿ ಮೌನವಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದ ವಿರುದ್ಧ ನಾಳೆ ಪ್ರತಿಭಟನೆ
ಕೇಂದ್ರ ಸರ್ಕಾರ ಕರ್ನಾಟಕ ಕೇಳಿರುವ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು ಪರಿಹಾರವಾಗಿ ಘೋಷಿಸಿದೆ. ಇದು ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ. ಹೀಗಾಗಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಮ್ಮ ನಾಯಕರೊಂದಿಗೆ ಪ್ರತಿಭಟನೆ ಮಾಡಲಾಗುವುದು. ಇನ್ನು ನಮ್ಮ ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತ ಪಡೆಯಲು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
“ನಾವು ಭಿಕ್ಷೆ ಕೇಳುತ್ತಿಲ್ಲ. ಇದು ನಮ್ಮ ಹಕ್ಕು, ಅದನ್ನು ಕೇಳುತ್ತಿದ್ದೇವೆ. ಇದನ್ನು ನೀಡುವುದು ಕೇಂದ್ರದ ಕರ್ತವ್ಯ. ನ್ಯಾಯಾಲಯ ಹಾಗೂ ಜನರ ಮುಂದೆ ನಮ್ಮ ಹೋರಾಟ ಮುಂದುವರಿಯಲಿದೆ. 35 ಸಾವಿರ ಕೋಟಿ ನಷ್ಟದಲ್ಲಿ 18 ಸಾವಿರ ಕೋಟಿ ಕೇಳಿದ್ದೆವು. ನಾವು ಕೇಳಿದ್ದು 50% ಮಾತ್ರ. ಆದರೂ ಅವರು ಕಡಿಮೆ ಪರಿಹಾರ ನೀಡಿದ್ದು ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ. ನಾವು ವರದಿ ಕೊಟ್ಟಿದ್ದು ಬಹಳ ಹಿಂದೆ ಅದಾದ ನಂತರವೂ ರಾಜ್ಯಕ್ಕೆ ಹೆಚ್ಚಿನ ನಷ್ಟವಾಗಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಇದನ್ನು ಓದಿದ್ದೀರಾ? ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರ
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಕೆಪಿಸಿಸಿ ರಾಜಕೀಯ ಹಾಗೂ ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ ಉಪಸ್ಥಿತರಿದ್ದರು.
