ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಉಡುಪಿ ಜಿಲ್ಲೆಯ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಭಟ್ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಬಿಜೆಪಿ ಟಿಕೆಟ್ ನೀಡದ ಕಾರಣ, ಬಂಡಾಯದ ಬಾವುಟ ಬೀಸಿದ್ದಾರೆ.
“ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ – ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ನನ್ನ ಸ್ಪರ್ಧೆ ಪಕ್ಷ ಅಥವಾ ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ” ಎಂದು ಭಟ್ ಹೇಳಿದ್ದಾರೆ.
“ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷದ ವರಿಷ್ಠರು ಟಿಕೆಟ್ ಭರವಸೆ ನೀಡಿದ್ದರು. ಈಗ ನಿರ್ಧಾರ ಬದಲಾಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ” ಎಂದು ರಘುಪತಿ ಭಟ್ ತಿಳಿಸಿದ್ದಾರೆ.