ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ; ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಲಿ: ಆರ್‌.ಅಶೋಕ್ ಒತ್ತಾಯ

Date:

Advertisements

ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯಿತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ” ಎಂದು ಕುಟುಕಿದರು.

“ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆ ಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ” ಎಂದು ಟೀಕಿಸಿದರು.

Advertisements

“ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ” ಎಂದು ದೂರಿದರು.

“ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ” ಎಂದರು.

ಲೂಟಿ ಸರ್ಕಾರ

“ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇವೆಂದು ಹೇಳಿ ನೀರಿನ ಸಮಸ್ಯೆ ತಂದು ಬ್ಯಾಡ್‌ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆಂದು ಕಮಿಶನ್‌ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್‌ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್‌ ಟ್ಯಾಕ್ಸ್‌ ಎಂಬ ಕಮಿಶನ್‌ ಕೊಡಬೇಕಾಗುತ್ತದೆ. ಈ ಕಮಿಷನ್‌ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ” ಎಂದು ಹರಿಹಾಯ್ದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರ ಬೀಳಿಸುತ್ತಾರೆ

“ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X