ನೀಟ್ – ಯುಜಿ 2024ರ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿಯ(ಎನ್ಟಿಎ) ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದುರಾಗಿದೆ ಎಂದು ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನೀಟ್ ವಿನ್ಯಾಸಗೊಳಿಸಿದ ಹಾಗೂ ನಿರ್ವಹಿಸಲಾಗಿರುವ ಹಿನ್ನೆಲೆಯಲ್ಲಿ ಎನ್ಟಿಎದ ಸಮಗ್ರತೆ ಬಗ್ಗೆ ಗಂಭೀರ ಪ್ರಶ್ನೆಗಳು ಎದುರಾಗಿದೆ. ಕಳೆದ ಒಂದು ದಶಕದಲ್ಲಿ ಎನ್ಸಿಇಆರ್ಟಿ ಕೂಡ ತನ್ನ ಎಲ್ಲ ವೃತ್ತಿಪರತೆಯನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
ನೀಟ್ ಸಮಸ್ಯೆಯ ಬಗ್ಗೆ ಹೆಚ್ಚು ಪ್ರಾಧ್ಯಾನತೆ ನೀಡಬೇಕಿದ್ದು, ನೀಟ್, ಎನ್ಟಿಎ ಹಾಗೂ ಎನ್ಸಿಇಆರ್ಟಿಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಲು ತಕ್ಷಣವೇ ಸಂಸದೀಯ ನೂತನ ಸ್ಥಾಯಿ ಸಮಿತಿಗಳನ್ನು ರಚಿಸುವ ಅಗತ್ಯವಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಿಬಿಎಸ್ಸಿ ಸಮಸ್ಯೆಯನ್ನು ಸೂಕ್ತವಾಗಿ ವಿಮರ್ಶಿಸಬೇಕೆಂದು ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪ್ರಕರಣಗಳು ಮತ್ತು ‘ಮಾನವಂತ’ ಮಾಧ್ಯಮಗಳು
“ನಾನು 2014 ಮತ್ತು 2019ರ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯನಾಗಿದ್ದು, ನೀಟ್ಗೆ ವ್ಯಾಪಕ ಬೆಂಬಲ ನೀಡಿರುವುದನ್ನು ನೆನಪಿಸಿಕೊಳ್ಳಿ. ನೀಟ್ ಸಿಬಿಎಸ್ಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಿದ್ದು ಸಿಬಿಎಸ್ಸಿಯೇತರ ವಿದ್ಯಾರ್ಥಿಗಳಿಗೆ ಅನಾನುಕೂಲವುಂಟಾಗುವುದರ ಬಗ್ಗೆ ತಮಿಳುನಾಡಿನ ಸಂಸದರು ಕಳವಳ ವ್ಯಕ್ತಪಡಿಸಿದ್ದರು” ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
“ಸಿಬಿಎಸ್ಸಿ ಸಮಸ್ಯೆಗಳಿಗೆ ಸೂಕ್ತ ವಿಶ್ಲೇಷಣೆಗಳು ಅಗತ್ಯವಿಲ್ಲ ಎಂದು ಈಗ ನಾನು ಯೋಚಿಸಿಲ್ಲ. ನೀಟ್ ತಾರತಮ್ಯವೆಸಗುತ್ತಿದೆಯೆ? ಬಡತನದ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ನಿರಾಕರಿಸುತ್ತಿದೆಯೆ? ಮಹಾರಾಷ್ಟ್ರ ರೀತಿಯ ಇತರ ರಾಜ್ಯಗಳು ಕೂಡ ನೀಟ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಮೇ 5 ರಂದು ಹಮ್ಮಿಕೊಳ್ಳಲಾಗಿದ್ದ ನೀಟ್ ಪರೀಕ್ಷೆಯಲ್ಲಿ ದೇಶಾದ್ಯಂತ 571 ಕೇಂದ್ರಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಎನ್ಟಿಎ ಇತಿಹಾಸದಲ್ಲಿಯೆ ಮೊದಲ ಬಾರಿಗೆ 67ಕ್ಕೂ ಹೆಚ್ಚು ವಿದ್ಯಾರ್ಥಿಗಳು 720 ಕ್ಕೆ 720 ಅಂಕ ಪಡೆದುಕೊಂಡಿದ್ದರು. ಈ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹರಿಯಾಣದ ಫರಿದಾಬಾದ್ ಪರೀಕ್ಷಾ ಕೇಂದ್ರದಲ್ಲಿ ಬರೆದ ವಿದ್ಯಾರ್ಥಿಗಳಾಗಿದ್ದರು.
ಪ್ರಶ್ನೆಪತ್ರಿಕೆ ಸೋರಿಕೆ, ಇತರೆ ಆರೋಪಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಎನ್ಟಿಎಗೆ ನಿರ್ದೇಶಿಸಿದೆ. ಇದಕ್ಕೂ ಮೊದಲು 10 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 8 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
