ಭಾರತೀಯ ದಂಡ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಮಾತನಾಡಿ, “ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜ಼ರ್ ಕೋಡ್(ಸಿಆರ್ಪಿಸಿ), ಭಾರತ ಸಾಕ್ಷ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದೂ ಕೂಡ ನಿಜವಾದ ಕ್ರಿಮಿನಲ್ ಜಸ್ಟೀಸ್ ಸಿಸ್ಟಮ್. ಈ ಮೂರು ಕಾನೂನುಗಳು ರತ್ನಗಳಿದ್ದಂತೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ಯಾವ ಉದ್ದೇಶಕ್ಕೆ ಹೊಸ ಕಾನೂನು ತರಲಾಗಿದೆ” ಎಂಬುದು ಅರ್ಥವಾಗುತ್ತಿಲ್ಲ” ಎಂದರು.
“ಭಾರತೀಯ ದಂಡ ಕ್ರಿಯಾ ಸಂಹಿತೆ ಕಾನೂನುಗಳನ್ನು ಬದಲಾಯಿಸುವಂತೆ ಜನರಿಂದ ಯಾವುದೇ ಒತ್ತಾಯಗಳು ಬಂದಿಲ್ಲ ಮತ್ತು ಯಾವುದೇ ಪಕ್ಷಗಳ ಪ್ರಣಾಳಿಕೆಯಲ್ಲೂ ಆ ಬೇಡಿಕೆ ಇರಲಿಲ್ಲ. ಆದರೂ ಏಕಾಏಕಿ ಈ ಹೊಸ ಕಾನೂನುಗಳನ್ನು ಜನರ ಮೇಲೆ ಏರಲಾಗುತ್ತಿದೆ. ಕಾಲಕ್ಕೆ ತಕ್ಕಂತೆ ಕಾನೂನು ಬದಲಾಗಬೇಕು. ಅದರಂತೆ ಹಲವು ಕಾನೂನುಗಳಿಗೆ ತಿದ್ದುಪಡಿ ಕೂಡ ಆಗಿದೆ. ಆದರೆ ಇಡೀ ಕಾನೂನುಗಳನ್ನೇ ಬದಲಾಯಿಸುವ ಅಗತ್ಯ ಇದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕರ್ನಾಟಕ ಒನ್ನಲ್ಲಿ ಬಸ್ ಪಾಸ್ ವಿತರಣೆಗೆ ಹೆಚ್ಚಿನ ಹಣ ವಸೂಲಿ; ಆರೋಪ
ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ ರವೀಂದ್ರ ನಾಥ್ ಶಾನುಭೋಗ್, ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಮುಖ್ಯ ಅತಿಥಿಯಾಗಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಕರ್ತ ಮೈಕಲ್ ರೊಡ್ರಿಗಸ್ ಇದ್ದರು.
