ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಜುಲೈ 9ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದೆ. ಜುಲೈ 9 ರಿಂದ 14ರವರೆಗೆ ಜಿಲ್ಲಾದ್ಯಂತ ರಥಯಾತ್ರೆ ಸಾಗಲಿದೆ ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಮಾಹಿತಿ ನೀಡಿದರು.
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜ್ಯೋತಿ ರಥಯಾತ್ರೆಯನ್ನು ಗೌರವದಿಂದ ಸ್ವಾಗತಿಸಲು ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
“ಜಿಲ್ಲೆಯ ಆರು ತಾಲೂಕುಗಳನ್ನು ಒಳಗೊಂಡಂತೆ ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲಾದ್ಯಂತ ಜುಲೈ 9ರಿಂದ 14ರವರೆಗೆ ಸಂಚರಿಸಲಿದೆ. ಸಂಬಂಧಪಟ್ಟ ಆಯಾ ತಾಲೂಕಿನ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಸಮನ್ವಯತೆಯೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು” ಎಂದು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, “ಸುವರ್ಣ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲಕ ಜುಲೈ 9ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಗುವುದು. ಜುಲೈ 10ರಂದು ಚಿತ್ರದುರ್ಗ, ಜುಲೈ 11ರಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ, ಜುಲೈ 12ರಂದು ಚಳ್ಳಕೆರೆ, ಜುಲೈ 13ರಂದು ಹಿರಿಯೂರು, ಜುಲೈ 14ರಂದು ಹೊಸದುರ್ಗ ತಾಲೂಕಿನಲ್ಲಿ ರಥಯಾತ್ರೆ ಸಂಚರಿಸಿ ನಂತರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತೆರಳಲಿದೆ” ಎಂದು ಮಾಹಿತಿ ನೀಡಿದರು.
“ಜ್ಯೋತಿ ರಥಯಾತ್ರೆ ಸಂದರ್ಭದಲ್ಲಿ ಎರಡು ಕಲಾ ತಂಡಗಳು ಮತ್ತು ನಗರದಲ್ಲಿ, ತಾಲೂಕುವಾರು ಯಾತ್ರೆ ಯಾವ ಮಾರ್ಗದಲ್ಲಿ ಸಾಗಬೇಕು ಎನ್ನುವ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ ವಿವಿಧ ಐತಿಹಾಸಿಕ, ವಿಶೇಷ ಸ್ಥಳಗಳ ಮೂಲಕ ಜ್ಯೋತಿಯಾತ್ರೆ ಹೋಗುವ ಪಟ್ಟಿಯನ್ನು ಸಿದ್ದಪಡಿಸಿ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದರು.
“ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ಬೆಳಿಗ್ಗೆ 9ಕ್ಕೆ ಜ್ಯೋತಿ ರಥಯಾತ್ರೆಯು ಪ್ರಾರಂಭವಾಗಲಿದ್ದು, ಒಂದು ದಿನ ಸಂಪೂರ್ಣ ಆಯಾ ತಾಲೂಕಿನಲ್ಲಿಯೇ ಸಂಚರಿಸಲಿದೆ. ರಥಯಾತ್ರೆಯು ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಒಳಗೊಂಡು, ವೈಭವಯುತವಾಗಿರಲಿದೆ. ಸಂಚಾರದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಸಾಹಿತಿಗಳು, ಜನಪ್ರತಿನಿಧಿಗಳು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವಂತಾಗಬೇಕು. ಇದೇ ವೇಳೆ ಕನ್ನಡ ಧ್ವಜ ವಿತರಣೆಗೆ ಕ್ರಮ ವಹಿಸಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆಣ್ಣು ಮಕ್ಕಳ ಪೂರ್ಣ ಶಿಕ್ಷಣ, ದೇಶದ ರಕ್ಷಣೆ; ಕ್ರೈ ಸಂಸ್ಥೆಯ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ
ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಎಂ ಶಿವಸ್ವಾಮಿ, ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
