ಕೇಂದ್ರ ಸರ್ಕಾರ ಇತ್ತೀಚಿಗೆ ಮಂಡಿಸಿದ ಬಜೆಜ್ನಲ್ಲಿ ಕರ್ನಾಟಕ ರಾಜ್ಯದ ಜನರ ನಿರೀಕ್ಷೆಯಂತೆ ಯೋಜನೆಗಳನ್ನು ಹಾಗೂ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎನ್ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಚೊಂಬು ಪ್ರದರ್ಶಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಮಾತನಾಡಿ, “ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ರಾಜಕ್ಕೆ ಹೆಚ್ಚಿನ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಎನ್ಡಿಎ ಮೈತ್ರಿಕೂಟದ ಮಿತ್ರ ಪಕ್ಷದ ರಾಜ್ಯಗಳಾದ ಆಂಧ್ರಪ್ರದೇಶ, ಬಿಹಾರ ಸೇರಿ ಇತರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅನ್ಯಾಯವಾಗಿದೆʼ ಎಂದು ಟೀಕಿಸಿದರು.
ʼರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟದ 19 ಸಂಸದರಿದ್ದಾರೆ. ಆದರೆ, ಕೇಂದ್ರದ ಮೇಲೆ ಒತ್ತಡ ಹಾಕಿ ಹೆಚ್ಚಿನ ಅನುದಾನ ತರುವಲ್ಲಿ ಅವರೂ ವಿಫಲರಾಗಿದ್ದಾರೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ತೆರಿಗೆ ಹಣ ಹೋಗುತ್ತದೆ. ಅದರಲ್ಲಿ ಅರ್ಧ ಭಾಗವಾದರೂ ನೀಡಿಲ್ಲ. ಇನ್ನೂ ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣ ನಿರ್ಲಕ್ಷ ವಹಿಸಿದೆ. ನಾವು ಈಗಾಗಲೇ ಲೋಕಸಭಾ ಅಧಿವೇಶನದಲ್ಲಿ ಹಾಗೂ ಹೊರಗೆ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿದ್ದೇವೆʼ ಎಂದರು.
ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ದೇಶದ ಇತರ ರಾಜ್ಯಗಳು ಟೀಕಿಸಿವೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಚನ್ನರೆಡ್ಡಿ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಪಾಟೀಲ್ ಅನುಪೂರ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?
ಪ್ರತಿಭಟನೆಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಕೆಪಿಸಿಸಿ ವೀಕ್ಷಕ ರಾಘವೇಂದ್ರ ಮಾನಸಗಲ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮರೆಡ್ಡಿ ಹಾಗೂ ಮುಖಂಡರಾದ ಬಸವರೆಡ್ಡಿ, ಚನ್ನಕೇಶವ ಗೌಡ ಬಾಣತಿಹಾಳ, ಸುದರ್ಶನ್ ನಾಯಕ್, ಕೃಷ್ಣ ಚಪೆಟ್ಲಾ, ಬಸನಗೌಡ ಪಾಟೀಲ್ ಚಿಂಚೋಳಿ, ಹನುಮಂತ ಲಿಂಗೇರಿ, ನಿಜಗುಣ ದೋರನಹಳ್ಳಿ, ಸಂಜುಕುಮಾರ್ ಕಾವಲಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.