ಕೇರಳದ ವಯನಾಡಿನ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿರುವ ಕೆಆರ್ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಇದೇ ಕುಟುಂಬದ ಮೂರು ಜನರು ವಯನಾಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಹಾಗೂ ಅಗತ್ಯ ಸಹಕಾರ ನೀಡಿ ಸಮನ್ವಯ ವಹಿಸಲು ಕರ್ನಾಟಕ ಸರಕಾರದಿಂದ ಅಧಿಕಾರಿಗಳ ತಂಡ ವಯನಾಡಿಗೆ ತೆರಳಿದ್ದು, ಅವರಿಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆಯನ್ನು ವಯನಾಡಿನಲ್ಲಿ ಒದಗಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಕರ್ನಾಟಕ ಸರಕಾರದಿಂದ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಮೃತರಾದ ಲೀಲಾವತಿ ಅವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ವಿತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು. ನಿಹಾಲ್ ಅವರು ಚಿಕ್ಕ ವಯಸ್ಸಿನ ಹುಡುಗನಾಗಿದ್ದು, ಅವರಿಗೂ ಸಹ ಸಣ್ಣ ಪ್ರಮಾಣದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಇದೇ ಸಂದರ್ಭದಲ್ಲಿ ಸಚಿವರು ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರದ ಮೊತ್ತ ನೀಡಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಜೊತೆಗಿದ್ದರು.