ರಾಜ್ಯದ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದು, ಕಾರಣ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಆಗ್ರಹಿಸಿ ದಾವಣಗೆರೆ ನಗರದಲ್ಲಿ ಭಾರತ ಕಮ್ಯೂನಿಷ್ಟ ಪಕ್ಷ ದಾವಣಗೆರೆ ಜಿಲ್ಲಾ ಮಂಡಳಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಾವಣಗೆರೆ ನಗರದ ಅಶೋಕ ರಸ್ತೆಯಲ್ಲಿನ ಕಾಮ್ರೇಡ್ ಪಂಪಾಪತಿ ಭವನದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ತೆರಳಿ ರಾಜ್ಯಪಾಲ ಹುದ್ದೆ ರದ್ದು ಮಾಡಿ, ಒಕ್ಕೂಟ ವ್ಯವಸ್ಥೆ ಉಳಿಸಿ ಎಂಬ ಘೋಷಣೆಯ ಒತ್ತಾಯದೊಂದಿಗೆ ಮನವಿಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಿಪಿಐ ಕಾರ್ಯದರ್ಶಿ ಹೆಚ್.ಜಿ.ಉಮೇಶ್ ಆವರಗೆರೆ, “ಕೇಂದ್ರ ಸರ್ಕಾರದಿಂದ ನೇಮಕಗೊಂಡ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ರಾಜ್ಯದಲ್ಲಿ ಜನರಿಂದ ಆಯ್ಕೆಯಾದ ಸುಭದ್ರ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ಬಳಸಿಕೊಂಡಿದೆ. ಕರ್ನಾಟಕದ ರಾಜಕೀಯ ಬೆಳವಣಿಗೆ ಗಮನಿಸಿದರೆ ಇದು ಗೊತ್ತಾಗುತ್ತದೆ” ಎಂದು ಕಿಡಿಕಾರಿದರು.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುತ್ತಿದೆ. ರಾಜ್ಯಪಾಲರ ಕಚೇರಿಗೆ ಲೋಕಾಯುಕ್ತ ಸಂಸ್ಥೆಯ ಹಾಗೂ ಇತರೆ ಪ್ರಕರಣದಲ್ಲಿ ತನಿಖೆಗೆ ಅನುಮತಿ ಕೇಳಿ ವರ್ಷಗಳೇ ಕಳೆದರೂ ಅವುಗಳ ಬಗ್ಗೆ ಯಾವುದೇ ತೀರ್ಮಾನ ಮಾಡದ ರಾಜ್ಯಪಾಲರು, ಮುಡಾ ಪ್ರಕರಣದಲ್ಲಿ ತೆಗೆದುಕೊಂಡ ತೀರ್ಮಾನ ಪೂರ್ಣ ರಾಜಕೀಯ ಪ್ರೇರಿತ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.
ಜಿಲ್ಲಾ ಕಾರ್ಯದರ್ಶಿ ಚಂದ್ರು ಆವರಗೆರೆ ಮಾತನಾಡಿ, “‘ಈಗಾಗಲೇ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಅಂದರೆ ತಮಿಳುನಾಡು, ಕೇರಳ, ಪಾಂಡಿಚೇರಿ, ಪಶ್ಚಿಮ ಬಂಗಾಳ, ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆದಿರುವುದು ಬಯಲಾಗಿದೆ. ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುವ ಹಾದಿ ಹಿಡಿದಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಹುದ್ದೆ ರದ್ದತಿಗೆ ಇದು ಸಕಾಲವಾಗಿದೆ. ಸಂವಿಧಾನಬದ್ದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ರಾಜ್ಯದ ಸ್ವಾಯತ್ತ ಅಧಿಕಾರದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ನಿಲ್ಲಿಸಲು, ಬಿಜೆಪಿ ಮತ್ತು ಆರ್.ಎಸ್.ಎಸ್. ಚಿಂತನೆಯನ್ನು ರಾಜ್ಯಪಾಲರ ಮೂಲಕ ಜಾರಿಗೊಳಿಸುವ ಹುನ್ನಾರ ತಪ್ಪಿಸಲು ರಾಜ್ಯಪಾಲರ ಹುದ್ದೆ ರದ್ದತಿಗೆ ಇದು ಸಕಾಲವಾಗಿದೆ. ಆದುದರಿಂದ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯಪಾಲರ ಹುದ್ದೆ ರದ್ಧತಿಗೆ ಆಗ್ರಹಿಸುತ್ತದೆ. ಈ ಬಗ್ಗೆ ಈಗಾಗಲೇ ರಾಷ್ಟ್ರವ್ಯಾಪಿ ಚಳುವಳಿ ಆರಂಭಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸುವ ಮೂಲಕ ರಾಜ್ಯಪಾಲ ಹುದ್ದೆ ರದ್ದು ಮಾಡಿ, ಒಕ್ಕೂಟ ವ್ಯವಸ್ಥೆ ಉಳಿಸಿ ಎಂಬ ಘೋಷಣೆಯೊಂದಿಗೆ ಒತ್ತಾಯಿಸಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಷ್ಟ್ರಪತಿ ಮುರ್ಮು ‘ಘಾಸಿʼಗೊಳ್ಳಲು ಕೋಲ್ಕತ್ತ ಪ್ರಕರಣದ ತನಕ ಕಾಯಬೇಕಿತ್ತೇ?
ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರಾದ ಆನಂದರಾವ್, ವಾಸು, ಶಿವಕುಮಾರ್, ನೇತ್ರಾವತಿ, ಲಕ್ಷ್ಮಣ್, ಸರೋಜಾ, ಐರಣಿ ಚಂದ್ರು, ಮಹಮದ್ ಪಾಷಾ, ಗದಿಗೇಶ್, ಬಸವರಾಜಪ್ಪ, ತಿಪ್ಪೇಸ್ವಾಮಿ, ಚಮನ್ ಸಾಬ್ ಮತ್ತು ಇತರ ಕಾರ್ಯಕರ್ತರು ಭಾಗವಹಿಸಿದ್ದರು.
