ನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
“ಮುಂಗಾರು ಹಂಗಾಮಿನಲ್ಲಿ ಅತಿ ಮತ್ತು ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಕುರಿತು ಕಂದಾಯ ಮತ್ತು ಕೃಷಿ ಇಲಾಖೆ ಮಾಡುತ್ತಿರುವ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ, ವರದಿ ನೀಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ಧಾರವಾಡದ ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆಹಾನಿ ಆಗಿದೆ. ಈ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಯಿಂದ ನಡೆದಿರುವ ಜಂಟಿ ಸಮೀಕ್ಷೆಯನ್ನು ಬೇಗನೆ ಪೂರ್ಣಗೊಳಿಸಬೇಕು. ಈ ಕುರಿತು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು” ಎಂದರು.
“ಪಂಚಾಯತ್ ರಾಜ್ಯ ಎಂಜಿನಿಯರಿಂಗ್ ವಿಭಾಗದ ವ್ಯಾಪ್ತಿಗೆ ಒಳಪಡುವ ಸುಮಾರು 624 ಕಿ.ಮೀ. ರಸ್ತೆ ಮಳೆಯಿಂದ ಹಾನಿ ಆಗಿದ್ದು, ಇಲಾಖೆಯಲ್ಲಿ ಲಭ್ಯವಿರುವ ಅನುದಾನ ಬಳಸಿಕೊಂಡು ತುರ್ತು ಅಗತ್ಯವಿರುವ ರಸ್ತೆಗಳನ್ನು ದುರಸ್ತಿ ಮಾಡಿ, ವಾಹನ ಸಂಚಾರಕ್ಕೆ ಅನುಕೂಲ ಮಾಡಬೇಕು ಮತ್ತು 35 ಸೇತುವೆಗಳು ಹಾನಿಯಾಗಿದ್ದು, ರಿಪೇರಿಗೆ ಆದ್ಯತೆ ನೀಡಬೇಕು. ಮತ್ತು ಇವುಗಳ ಕುರಿತು ಸಮಗ್ರ ವರದಿಯನ್ನು ಇಲಾಖೆ ಮುಖ್ಯಸ್ಥರಿಗೆ ಕೂಡಲೇ ಸಲ್ಲಿಸಲು ಕ್ರಮವಹಿಸಬೇಕು” ಎಂದು ನಿರ್ದೇಶಿಸಿದರು.
“ಸಾರ್ವಜನಿಕರಿಗೆ ಕುಡಿಯಲು ಸರಬರಾಜು ಆಗುವ ನೀರು ಸ್ವಚ್ಛ ಮತ್ತು ಶುದ್ಧವಾಗಿರುವಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಕಲ್ಮಶ ಅಥವಾ ಕಲುಷಿತ ನೀರು ಸರಬರಾಜು ಆದ ಬಗ್ಗೆ ದೂರು, ವರದಿ ಬಂದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯತನ ಆಧಾರದ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ, ನೇರವಾಗಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.
ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪ್ರಶಾಂತ ಪಾಟೀಲ ಮಾತನಾಡಿ, “ತುರ್ತು ಕಾಮಗಾರಿ ನಿರ್ವಹಣೆಗೆ ₹1.16 ಕೋಟಿ ಅನುದಾನ ಬಂದಿದ್ದು, ಆದ್ಯತೆ ಮೇಲೆ ಕಾಮಗಾರಿ ಕೈಗೊಳ್ಳಲಾಗುವುದು” ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್ ಎಚ್ ಕುಕನೂರ ಮಾತನಾಡಿ, “ಮಳೆಯಿಂದಾಗಿ 64 ಅಂಗನವಾಡಿ ಕೇಂದ್ರಗಳಿಗೆ ಹಾನಿಯಾಗಿದ್ದು, ಇದರಲ್ಲಿ 44 ಅಂಗನವಾಡಿ ಕೇಂದ್ರಗಳ ಕಟ್ಟಡ ದುರಸ್ತಿಗೆ ನಮ್ಮ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲಿ ಏಜನ್ಸಿ ಪಿಕ್ಸ್ ಮಾಡಿ, ಕಾರ್ಯಾದೇಶ ನೀಡಲಾಗುವುದು”ಎಂದರು.
ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ. ಸುಜಾತಾ ಹಸವೀಮಠ ಮಾತನಾಡಿ, “ಜಿಲ್ಲೆಯಲ್ಲಿ ಡೆಂಘೀ ಕಾಯಿಲೆ ನಿಯಂತ್ರಣವಾಗಿದ್ದು, ರೋಗಿಗಳ ಸಂಖ್ಯೆ ಇಳಿಮುಖವಾಗಿದೆ. ಆರೋಗ್ಯ ಕಾರ್ಯಕರ್ತೆಯಿಂದ ಲಾರ್ವಾನಾಶ ಮತ್ತು ಮನೆಮನೆ ಸಮೀಕ್ಷೆ, ಡೆಂಘೀ ಹಾಗೂ ಇತರ ಋತುಮಾನದ ಸಾಮಾನ್ಯ ಕಾಯಿಲೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಮುಂದುವರೆಸಲಾಗಿದೆ” ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್ ಎಸ್ ಕೆಳದಿಮಠ ಮಾತನಾಡಿ, “ಮಳೆಯಿಂದಾಗಿ ಸೋರುತ್ತಿದ್ದ ಮತ್ತು ದುರಸ್ತಿಗೆ ಅಗತ್ಯವಿದ್ದ ಕೊಠಡಿಗಳಿಂದ ಮಕ್ಕಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. ವಿಶೇಷ ಅನುದಾನದಲ್ಲಿ ಇವುಗಳ ದುರಸ್ತಿ ಕಾಮಗಾರಿ ನಡೆಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತುರ್ತು ಅಗತ್ಯವಿರುವ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯತ್ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ ಎಸ್ ಮಗನೂರಮಠ, ಎಲ್ಲ ತಹಶಿಲ್ದಾರರು, ತಾಲೂಕು ಪಂಚಾಯತ್ ಇಒಗಳು, ಅಗ್ನಿಶಾಮಕ, ಕೃಷಿ, ತೋಟಗಾರಿಕೆ, ಆಹಾರ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇದ್ದರು.