ಧಾರವಾಡ ಜಿಲ್ಲೆಯಲ್ಲಿ 2,453 ವಕ್ಫ್ ಆಸ್ತಿಗಳಿದ್ದು, ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್ ಆಸ್ತಿಗಳ ಸಮೀಕ್ಷೆ, ರಕ್ಷಣೆ ಮಾಡುವಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಹೇಳಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಫ್ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.
“ಧಾರವಾಡ ಜಿಲ್ಲೆಯಲ್ಲಿ 604 ವಕ್ಫ್ ಸಂಸ್ಥೆಗಳಿಗೆ, 2,453 ವಕ್ಫ್ ಆಸ್ತಿಗಳಿವೆ. ವಕ್ಫ್ಗೆ ಸಂಬಂಧಿಸಿದಂತೆ ಯಾವುದೇ ಆಸ್ತಿಯು ಒತ್ತುವರಿಯಾಗಿರುವ ವರದಿ ಇಲ್ಲ. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಧಿಕಾರಿಗಳು ಮುಕ್ತಾಯಗೊಳಿಸಬೇಕು. ವಸತಿ ಯೋಜನೆಯಡಿ ಸ್ಲಂಗಳಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆದಿದ್ದು, ಅವಳಿನಗರದಲ್ಲಿ ಬಾಕಿಯಿರುವ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯ ಮರೀಚಿಕೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ
“ಉತ್ತರ ಕನ್ನಡ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಹಾಗೂ ಕಬರಸ್ತಾನಗಳಿಗೆ ಭೂಮಿ ಸಮಸ್ಯೆ ಇದ್ದು, ಈ ಕುರಿತು ಕಂದಾಯ ಹಾಗೂ ಅರಣ್ಯ ಸಚಿವರೊಂದಿಗೆ ಸಭೆ ಜರುಗಿಸಿ, ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ತಿಳಿಸಿದರು.
ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ, ಶಾಸಕ ಎನ್ ಎಚ್ ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಕೆ, ವಕ್ಫ್ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯ ಮಟ್ಟದ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
