ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, “ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ” ಎಂದು ಹೇಳಿದರು.
“ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ” ಎಂದು ತಿಳಿಸಿದರು.
“ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ್ ಖಂಡ್ರೆ
ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ಬಳಿಕ ಮಾತನಾಡಿ, “ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಮತ್ತು ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಇಲಾಖೆ ನಿಂತಿದೆ” ಎಂದರು.