ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು ನಗರದಲ್ಲಿ ತಮಟೆ ಚಳವಳಿ ನಡೆಸಿದರು.
ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕಾಕರಗಲ್ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ತಮಟೆ ಚಳವಳಿ ವಿವಿಧ ರಸ್ತೆಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಮುಖಾಂತರ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ರಾಜ್ಯ ಸರ್ಕಾರ ಕೂಡಲೇ ಮೀಸಲಾತಿ ಹಂಚಿಕೆ ನಿರ್ಧಾರವನ್ನು ಕೈಗೊಳ್ಳಬೇಕು. ಸಂವಿಧಾನ ಆಶಯದಂತೆ ಸರ್ಕಾರ ನಡೆಯುವುದೇ ಆದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ನಿರ್ಧಾರ ಪ್ರಕಟಿಸಬೇಕೆಂದು ಒತ್ತಾಯಿಸಿದರು.
ದಲಿತ ಹೋರಾಟಗಾರ ಬಿ.ಕೃಷ್ಣಪ್ಪ ಇವರ ಜೂ.9 ರಂದು ಜನ್ಮ ದಿನವನ್ನು ಸರ್ಕಾರದಿಂದಲೇ ಆಚರಿಸಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು. ಬಾಕಿಯಿರುವ 3 ಲಕ್ಷ ಬ್ಯಾಕ್ ಲಾಗ್ ಹುದ್ದೆಗಳನ್ನು ನೇಮಕಾತಿ ನಡೆಸುವವರೆಗೆ ಹೊಸ ನೇಮಕಾತಿ ಪ್ರಕ್ರಿಯೆ ನಡೆಸಬಾರದು. ಬಗರ್ಹುಕುಂ ಸಾಗುವಳಿದಾರನ್ನು ಒಕ್ಕಲೆಬ್ಬಿಸದೇ ಸಾಗುವಳಿ ಚೀಟಿ ನೀಡಬೇಕು. ಸಮಾಜ ಕಲ್ಯಾಣ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕೆಂದು ಇದೇ ವೇಳೆ ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ ? ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ
ಪ್ರತಿಭಟನೆಯಲ್ಲಿ ಎಸ್.ಮಾರೆಪ್ಪ ವಕೀಲ, ಜಿಲ್ಲಾ ಸಂಚಾಲಕ ಸುರೇಶ ಬಳಗಾನೂರು, ತುರುಮಂದೆಪಪ ಕಟ್ಟಿಮನಿ, ರಾಮಣ್ಣ ಸಾಸಲಮರಿ, ಶಿವಪ್ಪ ಪಲಕನಮರಡಿ, ಶಿವರಾಜ ರುದ್ರಾಕ್ಷಿ, ಅಮರನಾಥ ಉದ್ಭಾಳ, ಈರಣ್ಣ ಕೇಳಗೆರಿ,ರಮೇಶ ಗೋಸಲೆ, ಕಾಸಿಮಪ್ಪ ಮುರಾರಿ, ಮೌನೇಶ ಕವಿತಾಳ ಸೇರಿದಂತೆ ವಿವಿಧ ತಾಲೂಕಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಪದಾಧಿಕಾರಿಗಳು ಭಾಗಿಯಾಗಿದ್ದರು.
