ವಕ್ಫ್ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಉಡಾಫೆ ಧೋರಣೆ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವಕ್ಫ್ ಅದಾಲತ್ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಪ್ರತಿ ಜಿಲ್ಲೆಯಲ್ಲಿ ವಕ್ಫ್ ಅದಾಲತ್ ನಡೆಸಲಾಗುತ್ತಿದೆ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಉಡಾಫೆ ಧೋರಣೆ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಖಾತೆ, ಒತ್ತುವರಿ ತೆರವು, ಖಬರಸ್ಥಾನ ವಿಚಾರಗಳಿಗೆ ಸಂಬಂಧಿಸಿದ ಮನವಿಗಳ ಬಗ್ಗೆ ಇನ್ನೊಂದು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗಡುವು ನೀಡಿದ ಸಚಿವರು, ಜಿಲ್ಲಾ ವಕ್ಫ್ ಅಧಿಕಾರಿಗಳು ಆಸ್ತಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ವಿಷಯದಲ್ಲಿ ಅಸಡ್ಡೆ ತೋರುತ್ತಿದ್ದು, ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಜಿಲ್ಲಾ ವಕ್ಫ್ ಅಧಿಕಾರಿಗಳು ನಿರಂತರವಾಗಿ ಜಿಲ್ಲಾಡಳಿತ ಜತೆ ಸಂಪರ್ಕದಲ್ಲಿದ್ದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ವಕ್ಫ್ ಆಸ್ತಿ ದೇವರ ಆಸ್ತಿ. ಇದನ್ನು ರಕ್ಷಣೆ ಮಾಡುವುದು ಪುಣ್ಯದ ಕೆಲಸ. ವಕ್ಫ್ ಅದಾಲತ್ನಿಂದ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಾಕಷ್ಟು ಸಮಸ್ಯೆಗಳು ಬಗೆಹರಿದಿವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಕ್ಫ್ ಅದಾಲತ್ನಲ್ಲಿ ಸಲ್ಲಿಕೆಯಾದ ಮನವಿಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಿ, ತ್ವರಿತ ಕ್ರಮ ಕೈಗೊಳ್ಳಲು ಸಚಿವರು ಸೂಚನೆ ನೀಡಿದ ಸಚಿವ ಜಮೀರ್, ಒತ್ತುವರಿ ತೆರವು ಸಂಬಂಧ ಕೆಲವು ಪ್ರಕರಣಗಳಲ್ಲಿ ವಕ್ಫ್ ಬೋರ್ಡ್ ಪರ ನ್ಯಾಯಾಲಯದ ಆದೇಶ ಬಂದಿದೆ. ಪೊಲೀಸ್ ರಕ್ಷಣೆಯಲ್ಲಿ ತೆರವು ಮಾಡಿಕೊಡಲು ನಿರ್ದೇಶನ ನೀಡಿದರು. ವಕ್ಫ್ ಅಧಿಕಾರಿಗಳು ನಮ್ಮ ಆಸ್ತಿಗೆ ಕಾಂಪೌಂಡ್ ನಿರ್ಮಿಸಿ ಸಂರಕ್ಷಣೆ ಮಾಡಲು ಸೂಚಿಸಿದರು.
ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್ಐಆರ್
ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸಿಇಒ ಜೀಲಾನಿ ಮೊಕಾಶಿ, ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಎಸ್ ಪಿ ಶ್ರೀನಿವಾಸುಲು, ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಸಭೆಯಲ್ಲಿ ಉಪಸ್ಥಿತರಿದ್ದರು.
