ನ್ಯಾಯಾಲಯ ಕಲಾಪದ ವೇಳೆ ನ್ಯಾಯಾಧೀಶರು ನೀಡಿರುವ ವಿವಾದಾತ್ಮಕ ಮತ್ತು ಅಸಹ್ಯಕರ ಹೇಳಿಕೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿವೆ. ಈ ಬೆನ್ನಲ್ಲೇ, ಪೂರ್ವಾನುಮತಿ ಪಡೆಯದೇ ಕಲಾಪದ ಲೈವ್ ಸ್ಟ್ರೀಮಿಂಗ್ನ ವಿಡಿಯೋಗಳನ್ನು ಬಳಸುವಂತಿಲ್ಲ, ವಿಡಿಯೋ ರೆಕಾರ್ಡಿಂಗ್ ಮತ್ತು ಹಂಚಿಕೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಬಗ್ಗೆ, ಲೈವ್ ಸ್ಟ್ರೀಮಿಂಗ್ಗೂ ಮುನ್ನ ಸಂದೇಶ ಹಾಕುವ ಮೂಲಕ, ವೀಕ್ಷಕರಿಗೆ ಎಚ್ಚರಿಕೆ ನೀಡಲಾರಂಭಿಸಿದೆ.
ಕರ್ನಾಟಕ ಹೈಕೋರ್ಟ್ 2022ರ ಜನವರಿ 1ರಿಂದ ‘ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್ಸ್ಟ್ರೀಮ್) ಮತ್ತು ರೆಕಾರ್ಡಿಂಗ್ ನಿಯಮಗಳು-2021’ಅನ್ನು ಜಾರಿಗೊಳಿಸಿದೆ. ಇದರಲ್ಲಿ ಲೈವ್ ಸ್ಟ್ರೀಮಿಂಗ್ ಹಾಗೂ ರೆಕಾರ್ಡಿಂಗ್ ನಿಯಮಗಳನ್ನು ಸೂಚಿಸಲಾಗಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ನಿಯಮಗಳಿಗೆ ಸಂಬಂಧಿಸಿದಂತೆ ನೋಟಿಸ್ಅನ್ನು ಪ್ರತಿಯೊಂದು ಕೋರ್ಟ್ ಹಾಲ್ಗಳ ವಿಡಿಯೋ ಕಾನ್ಫರೆನ್ಸ್ ಪರದೆಯ ಮೇಲೆ ಕಲಾಪ ಆರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನ ಭೋಜನದ ವೇಳೆಯಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದೂ ವರದಿಯಲ್ಲಿ ಉಲ್ಲೇಖಿಸಿದೆ.
“ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ (ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳು) ಕಲಾಪದ ಲೈವ್ ಸ್ಟ್ರೀಮಿಂಗ್ ಅಥವಾ ಹೈಕೋರ್ಟ್ ಯೂಟ್ಯೂಬ್ ಚಾನಲ್ನಲ್ಲಿನ ವಿಡಿಯೊಗಳನ್ನು ರೆಕಾರ್ಡ್ ಮಾಡುವುದಾಗಲಿ, ಪ್ರಸರಣ ಮಾಡುವುದಾಗಲಿ ಮಾಡುವಂತಿಲ್ಲ” ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ.
“ಪೂರ್ವಾನುಮತಿ ಪಡೆಯದೇ ಲೈವ್ ಸ್ಟ್ರೀಮಿಂಗ್ನ ಮರು ಪ್ರಸಾರ, ವರ್ಗಾವಣೆ, ಅಪ್ಲೋಡ್ ಮಾಡುವುದು, ಪೋಸ್ಟ್ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರವನ್ನು ಮಾಡುವಂತಿಲ್ಲ” ಎಂದು ಹೈಕೋರ್ಟ್ ಹೇಳಿದೆ.
“ನ್ಯಾಯಾಲಯದ ಕಲಾಪವನ್ನು ರೆಕಾರ್ಡ್ ಮಾಡಲು ಅಥವಾ ಅದರ ನಿರೂಪಣೆಗೆ ಯಾವುದೇ ವ್ಯಕ್ತಿಗೆ ಅನುಮತಿ ನೀಡಲಾಗಿಲ್ಲ. ನ್ಯಾಯಾಲಯದ ನಿಯಮ ಉಲ್ಲಂಘಿಸಿದ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲಾಗುತ್ತದೆ. ನ್ಯಾಯಾಲಯದ ಕಲಾಪದ ರೆಕಾರ್ಡಿಂಗ್ ಮತ್ತು ಆರ್ಕೈವ್ ದತ್ತಾಂಶದ ಮೇಲೆ ನ್ಯಾಯಾಲಯಕ್ಕೆ ವಿಶೇಷ ಹಕ್ಕುಸ್ವಾಮ್ಯವಿದೆ” ಎಂದ ಹೇಳಿದೆ
ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಷಾನಂದ ಅವರು ಗೋರಿಪಾಳ್ಯವನ್ನು ಪಾಕಿಸ್ತಾನವೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಲ್ಲದೆ, ಮಹಿಳಾ ವಕೀಲೆಯೊಬ್ಬರಿಗೆ ಅನುಚಿತವಾದ, ಅಸಹ್ಯಕರವಾದ ಹೇಳಿಕೆಯಲ್ಲಿ ನಿಂದಿಸಿದ್ದರು. ಈ ವಿಡಿಯೋಗಳು ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆ ಮತ್ತು ವಿರೋಧಕ್ಕೆ ಗುರಿಯಾಗಿದ್ದವು. ಅಲ್ಲದೆ, ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್, ಸ್ವಯಂಪ್ರೇರಿತ ‘ಸು ಮೊಟೋ’ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಧೀಶ ಶ್ರೀಷಾನಂದ ಅವರಿಗೆ ನೋಟೀಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ, ಹೈಕೋರ್ಟ್ ಕಲಾಪದ ವಿಡಿಯೋಗಳನ್ನು ಅನುಮತಿ ಇಲ್ಲದೆ ಬಳಸುವಂತಿಲ್ಲವೆಂದು ಹೈಕೋರ್ಟ್ ಆದೇಶಿಸಿದೆ.