ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳಿಗೆ ಬೋಧನೆ ಜೊತೆಗೆ ಉತ್ತಮ ಸಂಸ್ಕಾರ ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ದೇಶಪ್ರೇಮ ಬೆಳೆಸಲು ಪ್ರೇರಣೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ಹೇಳಿದರು.
ಔರಾದ ಪಟ್ಟಣದಲ್ಲಿ ಶನಿವಾರ ಜರುಗಿದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ತಾಲೂಕಿನ ಶಿಕ್ಷಣ ರಂಗ ಸಾಕಷ್ಟು ಸುಧಾರಿಸಿದೆ. ಪ್ರತಿ ವರ್ಷ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ. ಆದರೆ ಈ ವರ್ಷ ಫಲಿತಾಂಶ ಕುಸಿದಿರುವುದು ಬೇಸರ ತಂದಿದೆ. ಈ ಸಲ ಎಲ್ಲ ಶಿಕ್ಷಕರು ಫಲಿತಾಂಶ ಸುಧಾರಣೆಗೆ ಪ್ರಯತ್ನಿಸಬೇಕು’ ಎಂದರು.
‘ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿಯೂ ಸಾಧಿಸಬೇಕೆಂಬ ಉದ್ದೇಶದಿಂದ ಔರಾದ್ನಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ. ಇದರ ಸದ್ಬಳಕೆಯಾಗಬೇಕು. ನಮ್ಮ ಕ್ಷೇತ್ರದ ಮಕ್ಕಳು ಕೂಡ ರಾಜ್ಯಮಟ್ಟದಲ್ಲಿ ಗೆಲುವು ಸಾಧಿಸಬೇಕು. ಈ ದಿಸೆಯಲ್ಲಿ ಶಿಕ್ಷಕರು ಪ್ರಯತ್ನ ವಹಿಸಬೇಕು.ಕ್ಷೇತ್ರದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಐಎಎಸ್, ಐಪಿಎಸ್ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಈ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಶಿಕ್ಷಕರು ಸಹಕರಿಸಬೇಕು’ ಎಂದು ಕೋರಿದರು.

‘ಅನ್ನದಾತ ರೈತ, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಹಾಗೂ ದೇಶದ ರಕ್ಷಣೆಗೆ ಹೋರಾಡುವ ಸೈನಿಕರೆಂದರೆ ನನಗೆ ಎಲ್ಲಿಲ್ಲದ ಪ್ರೀತಿ. ಇವರನ್ನು ಸದಾ ಗೌರವಿಸುತ್ತೇನೆಂದು ತಿಳಿಸಿದ ಅವರು, ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿರುವ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮ ವಹಿಸುತ್ತಿದ್ದು, ಪ್ರತಿ ವರ್ಷ ಶಿಕ್ಷಕರು, ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರ ಆತ್ಮಬಲವನ್ನು ವೃದ್ಧಿಸುವ ಕೆಲಸ ಮಾಡುತ್ತಿದ್ದೇನೆ’ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಭಾಲ್ಕಿಯ ಹಿರೇಮಠ ಸಂಸ್ಥಾನದ ಪೂಜ್ಯ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಶಾಸಕ ಪ್ರಭು ಚವ್ಹಾಣ ಅವರು ಸಮಾಜದಲ್ಲಿ ಅತಿ ಹೆಚ್ಚು ಗೌರವಕ್ಕೆ ಪಾತ್ರರಾಗಿರುವ ಶಿಕ್ಷಕರನ್ನು ಪ್ರತಿ ವರ್ಷ ಸನ್ಮಾನಿಸುತ್ತಿರುವುದು ಆದರ್ಶ ಕೆಲಸವಾಗಿದೆ. ಅನಾಥ ಮಕ್ಕಳನ್ನು ದತ್ತು ಪಡೆದು ಶಿಕ್ಷಣ ಕೊಡಿಸುವುದು, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಿರುವುದು ಅಪರೂಪದ ಕಾರ್ಯವಾಗಿದೆ’ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಔರಾದ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಎಲ್ಲ ನಿವೃತ್ತ ಶಿಕ್ಷಕರು, ಮರಣ ಹೊಂದಿದ ಶಿಕ್ಷಕರ ಅವಲಂಬಿತರು ಹಾಗೂ ಅವಳಿ ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಸನ್ಮಾನಿಸಿದರು .
ಇದೇ ವೇಳೆ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಜಯಿಸಿ ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ ನಾಯಕ್ ಸೇರಿದಂತೆ ಶಿಕ್ಷಣ ಇಲಾಖೆಯ ಪ್ರಕಾಶ ರಾಠೋಡ್, ಸಂಜಯ ಮೇತ್ರೆ, ಬಲಭೀಮ ಕುಲಕರ್ಣಿ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ರಾಮಶೆಟ್ಟಿ ಪನ್ನಾಳೆ, ಪ್ರತೀಕ ಚವ್ಹಾಣ, ಶಾಲೀವಾನ್ ಉದಗೀರೆ, ನಯೀಮೋದ್ದಿನ್, ಸಂತೋಷ ರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ರೆಡ್ಡಿ ಮಾಲಿಪಾಟೀಲ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೆಹಬೂಬ್ ಪಾಟೀಲ, ಪಂಢರಿ ಆಡೆ, ಬಸವರಾಜ ಪಾಟೀಲ, ಸಂಜುಕುಮಾರ ಶೆಟಕಾರ, ಶಿವಶರಣಪ್ಪ ವಲ್ಲೆಪೂರೆ ಸೇರಿದಂತೆ ವಿವಿಧ ಶಾಲಾ, ಕಾಲೇಜಿನ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.