ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದು, ಮುಖ್ಯಮಂತ್ರಿಗಳ ಅರ್ಜಿಯನ್ನು ವಜಾಗೊಳಿಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್, ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಬೆಂಬಲಕ್ಕೆ ನಿಂತಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ನ ಸೇಡಿನ ರಾಜಕೀಯದ ವಿರುದ್ದ ಹೋರಾಟ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ.
ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿ ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದು, “ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನಮಗಿದೆ” ಎಂದಿದ್ದಾರೆ.
“ಸ್ವತಃ ಸಿದ್ದರಾಮಯ್ಯ ಅವರೇ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ ಎಂಬ ನಂಬಿಕೆ ನಮಗಿದೆ. ಪಕ್ಷ ಹಾಗೂ ನಾವೆಲ್ಲಾ ನಾಯಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದೇವೆ” ಎಂದು ತಿಳಿಸಿದ್ದಾರೆ.
“ರಾಜಭವನವನ್ನ ದುರುಪಯೋಗ ಪಡಿಸಿಕೊಂಡು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಸಂಚಿನ ರಾಜಕೀಯದಲ್ಲಿ ಅಂತಿಮ ಜಯ ನಮ್ಮದಾಗಲಿದೆ. ಮುಡಾ ಪ್ರಕರಣವನ್ನ ಸೃಷ್ಟಿಸಿ ಸರ್ಕಾರವನ್ನ ಅಸ್ಥಿರಗೊಳಿಸುವ ಮೂಲಕ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಬಡ ಜನರಿಂದ ಕಸಿಯುವ ಬಿಜೆಪಿ, ಜೆಡಿಎಸ್ ಪ್ರಯತ್ನ ವಿಫಲವಾಗಲಿದೆ. ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ” ಎಂದು ಗುಂಡೂರಾವ್ ಹೇಳಿದ್ದಾರೆ.
ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ: ಮಹದೇವಪ್ಪ
“ದ್ವೇಷದ ರಾಜಕಾರಣದ ಭಾಗವಾಗಿ ನಡೆಯುತ್ತಿರುವ ಬೆಳವಣಿಗೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಪ್ರಶ್ನೆಯೂ ಇಲ್ಲ. ಮುಂದಿನ ಹಂತದ ನ್ಯಾಯಾಂಗ ಹೋರಾಟಕ್ಕೆ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಸಿದ್ಧವಾಗಿದ್ದು ಇಡೀ ರಾಜ್ಯದ ಜನರು ಮತ್ತು ಹೈಕಮಾಂಡ್ ಮುಖ್ಯಮಂತ್ರಿಗಳ ಬೆನ್ನಿಗಿದ್ದಾರೆ. ದ್ವೇಷದ ರಾಜಕೀಯಕ್ಕೆ ಹಿಂದೆ ಹೆಜ್ಜೆ ಹಾಕುವ ಪ್ರಶ್ನೆಯೇ ಇಲ್ಲ” ಎಂದು ಸಚಿವ ಡಾ. ಎಚ ಸಿ ಮಹದೇವಪ್ಪ ಎಕ್ಸ್ ತಾಣದಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ-ಜೆಡಿಎಸ್ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ನ್ಯಾಯಂಗದ ಮೂಲಕವೇ ಉತ್ತರ: ಬಿ ಕೆ ಹರಿಪ್ರಸಾದ್
“ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನಿಮತಿ ನೀಡಿರುವ ಹೈಕೋರ್ಟ್ ತೀರ್ಪು,ಅನಿರೀಕ್ಷಿತ ಮಾತ್ರವಲ್ಲ ದುರಾದೃಷ್ಟಕರ. ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಿ ,ಮುಖ್ಯಮಂತ್ರಿಯ ವಿರುದ್ಧದ ಬಿಜೆಪಿಯ ಷಡ್ಯಂತ್ರದ ಭಾಗವಾಗಿಯೇ ಪ್ರಕ್ರಿಯೆ ನಡೆಯುತ್ತಿರುವುದು ಸ್ಪಷ್ಟ. ಸೇಡಿನ ರಾಜಕಾರಣಕ್ಕೆ ನ್ಯಾಯಂಗದ ಮೂಲಕವೇ ಉತ್ತರ ಸಿಗಲಿದೆ” ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
ಷಡ್ಯಂತ್ರಕ್ಕೆ ಸರ್ಕಾರ ಬಲಿ ಕೊಡಲು ಸಾಧ್ಯವಿಲ್ಲ: ತಿಮ್ಮಾಪುರ
“ಕಾನೂನಾತ್ಮಕವಾಗಿ ಇದನ್ನು ನಾವು ಎದುರಿಸುತ್ತೇವೆ. ನಮ್ಮ ಸಿಎಂ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಇಂತಹ ಷಡ್ಯಂತ್ರಕ್ಕೆ ಕರ್ನಾಟಕ ಸರ್ಕಾರವನ್ನು ಬಲಿ ಕೊಡಲು ಸಾಧ್ಯವಿಲ್ಲ. ಜನತೆ ಸಿದ್ದರಾಮಯ್ಯ ನೇತೃತ್ವದ 135 ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಸಿದ್ದರಾಮಯ್ಯ ಅವರೇ ಯಾವುದೇ ಕಾರಣಕ್ಕೂ ವಿಚಲಿತರಾಗಬೇಡಿ. ನಿಮ್ಮ ಜೊತೆಗೆ ಡಿಕೆಶಿ, ಸಚಿವರು, ಶಾಸಕರು ಇದ್ದೇವೆ. ಮುಂದೆ ಕಾನೂನು ಹೋರಾಟ ಮಾಡಲು ಅವಕಾಶ ಇದೆ. ಕಾನೂನು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ತನಿಖೆಗೆ ಆದೇಶ ಆಗಿದ್ದರೆ ಆಗಲಿ. ತಪ್ಪಿತಸ್ಥರಾದ ಮೇಲೆ ವಿಚಾರ ಮಾಡ್ತೀವಿ” ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು.
ತಪ್ಪು ಕಂಡುಬಂದರೆ ಮಾತ್ರ ರಾಜೀನಾಮೆ: ಜಾರಕಿಹೊಳಿ
ಕಾಂಗ್ರೆಸ್ ಹೈ ಕಮಾಂಡ್ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿದರು.
ಮುಂದುವರಿದು, “ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ, ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ” ಎಂದು ತಿಳಿಸಿದರು.
ಪ್ರಾಸಿಕ್ಯೂಷನ್ಗೆ ಅನುಮತಿ ಇಲ್ಲ: ಎಂ ಬಿ ಪಾಟೀಲ
“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪನ್ನು ನಾವು ರಾಜಕೀಯವಾಗಿಯೂ ಕಾನೂನಿನ ದೃಷ್ಟಿಯಿಂದಲೂ ಎದುರಿಸಲಿದ್ದೇವೆ. ಈಗ ನ್ಯಾಯಾಲಯವು ಪ್ರಾಥಮಿಕ ತನಿಖೆಗೆ ಅನುಮತಿ ಕೊಟ್ಟಿದೆಯೇ ವಿನಾ ಪ್ರಾಸಿಕ್ಯೂಷನ್ ಅಲ್ಲ” ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
“ಕುಮಾರಸ್ವಾಮಿ, ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಮುಗಿದಿದ್ದರೂ ರಾಜ್ಯಪಾಲರು ಅವುಗಳ ಬಗ್ಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಆದರೆ, ಸಿದ್ದರಾಮಯ್ಯ ವಿರುದ್ಧ ಅವರು ಅನುಕೂಲಸಿಂಧು ತೀರ್ಮಾನ ಕೈಗೊಂಡಿದ್ದಾರೆ. ಇದೆಂತಹ ನೈತಿಕತೆ” ಎಂದು ಪ್ರಶ್ನಿಸಿದ್ದಾರೆ.