ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ
ಪ್ರತಿಪಾದಿಸಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಡಿಕೇರಿಯ ಗಾಂಧಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ನಗರಸಭೆ, ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಹಾಗೂ ಭಾರತೀಯ ಸೇವಾದಳ ಇವರ ಸಹಕಾರದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜನ್ಮ ವರ್ಷಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದರು.
“ವಿಶ್ವಸಂಸ್ಥೆ ಸೇರಿದಂತೆ ದೇಶ ವಿದೇಶಗಳಲ್ಲಿಯೂ ಕೂಡಾ ಗಾಂಧೀಜಿಯವರ ಪುತ್ಥಳಿಯನ್ನು ಕಾಣಬಹುದಾಗಿದೆ. ವಿಶ್ವ ಸಂಸ್ಥೆಯು ಗಾಂಧೀಜಿ ಜನ್ಮ ದಿನವನ್ನು ‘ವಿಶ್ವ ಅಹಿಂಸಾ’ ದಿನವನ್ನಾಗಿ ಘೋಷಿಸಿ, ಆಚರಿಸುತ್ತಿದೆ” ಎಂದು ಹೇಳಿದರು.
“ವಿಶ್ವ ನಾಯಕರು ಗಾಂಧೀಜಿಯವರ ಜೀವನ ಬೋಧನೆಯನ್ನು ಪಾಲಿಸುತ್ತಾರೆ. ಗಾಂಧೀಜಿಯವರ ಜೀವನ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ ಎಲ್ಲರಿಗೂ ಮಾದರಿ” ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ಸರ್ವೋದಯ ಸಮಿತಿ ಮಾಜಿ ಅಧ್ಯಕ್ಷ ಟಿ ಪಿ ರಮೇಶ್ ಮಾತನಾಡಿ, “ಭಾರತಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟ ಗಾಂಧೀಜಿ, ಇಡೀ ವಿಶ್ವಕ್ಕೆ ಶಾಂತಿ ಸ್ಥಾಪಿಸಿದ್ದರು. ಗಾಂಧೀಜಿಯವರು ಜಗತ್ತು ಕಂಡ ಒಬ್ಬ ಶ್ರೇಷ್ಠ ಸಮಾಜ ಸುಧಾರಕ, ಸತ್ಯಾಗ್ರಹಿ, ಪತ್ರಕರ್ತರಾಗಿ ಗ್ರಾಮ ಸ್ವರಾಜ್ಯದ ಹರಿಕಾರರಾಗಿ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಲಾಲ್ ಬಹದ್ದೂರು ಶಾಸ್ತ್ರಿಯವರು ಭಾರತದ ಎರಡನೇ ಪ್ರಧಾನಮಂತ್ರಿಯಾಗಿ ಸರಳ, ಸಜ್ಜನಿಕೆಗೆ ಹೆಸರು ವಾಸಿಯಾಗಿದ್ದರು. ಸೇನೆ ಮತ್ತು ಕೃಷಿಗೆ ಹೆಚ್ಚಿನ ಒತ್ತು ನೀಡಿದವರಾಗಿದ್ದರು” ಎಂದು
ಹೇಳಿದರು.
ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ ಜಿ ಅನಂತಶಯನ ಮಾತನಾಡಿ, “ಗಾಂಧೀಜಿಯವರ ವಿಚಾರಧಾರೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಪುಸ್ತಕ ಅಧ್ಯಯನ ಮಾಡುವಂತಾಗಬೇಕು. ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು.
ಸತ್ಯಕ್ಕಾಗಿ ಹೋರಾಟ ಗಾಂಧಿ ಕಲಿಸಿದ ಪಾಠವಾಗಿದೆ” ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಮಾತನಾಡಿ, “ಗಾಂಧೀಜಿ ಸ್ವಾತಂತ್ರ್ಯದ ಪ್ರತೀಕ, ಗ್ರಾಮ ಸ್ವರಾಜ್ಯದ ಸಾಕಾರ ಮೂರ್ತಿ, ಎಲ್ಲರ ಮೆಚ್ಚಿನ ಬಾಪು” ಎಂದು ವರ್ಣಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ
ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಕೆ ಟಿ ಬೇಬಿ ಮ್ಯಾಥ್ಯೂ ಮಾತನಾಡಿ, “ಗಾಂಧೀಜಿ ಕರ್ನಾಟಕ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿ, ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದು ವಿಶೇಷ” ಎಂದು ಸ್ಮರಿಸಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕತೆ ರಾಣಿ ಮಾಚಯ್ಯ, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ ಎಸ್ ಸುಂದರರಾಜ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ ಬಸಪ್ಪ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸಿದ್ದೇಗೌಡ, ತಹಶೀಲ್ದಾರ್ ಪ್ರವೀಣ್ ಕುಮಾರ್, ಪೌರಾಯುಕ್ತ ರಮೇಶ್, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್ ನ ದಮಯಂತಿ, ಅಂಬೆಕಲ್ಲು ನವೀನ್, ಸಂಪತ್ ಕುಮಾರ್, ಟಿ ಎಂ ಮುದ್ದಯ್ಯ, ಹರಿಣಿ ಸೇರಿದಂತೆ ಇತರರು ಇದ್ದರು.