ʼತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅಕ್ಟೋಬರ್ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ʼದಸರಾ ಹಬ್ಬದ ಮುನ್ನ ಎರಡು ಕಂತಿನ ಹಣ ನಿಮಗೆಲ್ಲ ಸಿಗಲಿದೆ. ಭರ್ಜರಿಯಾಗಿ ದಸರಾ ಹಬ್ಬ ಆಚರಿಸಿ, ಅದೇ ನಮಗೆ ಸಂತೋಷʼ ಎಂದರು.
ʼಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದರುʼ ಎಂದು ನೆನಪಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು
ʼಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆʼ ಎಂದು ಸಚಿವರು ಹೇಳಿದರು.