ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ಅಭಿವೃದ್ಧಿ ಮಾದರಿಗಳನ್ನು ದೇಶದಲ್ಲಿ ಅನುಷ್ಠಾನಗೊಳಿಸಿದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ವಿಕಸಿತ ಭಾರತದ ಗುರಿಗಳನ್ನು ಸುಲಭವಾಗಿ ಸಾಧಿಸಲು ಸಾಧ್ಯವಿದೆ ಎಂದು ಕುಲಪತಿ ಬಿ ಕೆ ತುಳಸಿಮಾಲ ಅವರು ಪ್ರತಿಪಾದಿಸಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮ ಸ್ವರಾಜ್ಯ, ಗುಡಿ ಕೈಗಾರಿಕೆಗಳ ಅಭಿವೃದ್ಧಿ ಹೀಗೆ ಹಲವು ಬಗೆಯ ಅಭಿವೃದ್ಧಿ ಮಾದರಿಗಳ ಮೂಲಕ ನಾವು ದೇಶದ ಪ್ರಗತಿಗೆ ಮುಂದಾಗಬೇಕಿದೆ” ಎಂದು ಸಲಹೆ ನೀಡಿದರು.
“ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪರಂಪರೆಯನ್ನು ನಾವು ಸಂಪೂರ್ಣವಾಗಿ ಅರ್ಥೈಸಿಕೊಂಡು ಮುಂದಿನ ಪೀಳಿಗೆಗೆ ಅದನ್ನು ದಾಟಿಸಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಅದನ್ನು ನಾವೆಲ್ಲರೂ ಮನಃಪೂರ್ವಕವಾಗಿ ಮಾಡಿದಾಗ ಮಾತ್ರ ಇಂಥ ಜಯಂತಿ ಆಚರಣೆಗಳಿಗೆ ಮಹತ್ವ ಬರುತ್ತದೆ” ಎಂದರು.
ಮುಖ್ಯ ಅತಿಥಿ ನಿವೃತ್ತ ಪ್ರಾಧ್ಯಾಪಕ ಬಿ ಜಿ ಪತ್ತಾರ ಮಾತನಾಡಿ, “ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಮೌಲ್ಯಗಳು ಇವತ್ತಿಗೂ ಪ್ರಸ್ತುತವಾಗಿದ್ದು, ಇವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಆಳವಡಿಸಿಕೊಂಡು ಅನುಷ್ಠಾನಕ್ಕೆ ತರಬೇಕು” ಎಂದು ಸಲಹೆ ನೀಡಿದರು.
“ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಸತತ ಪರಿಶ್ರಮ ಮತ್ತು ನಿರ್ದಿಷ್ಟ ಗುರಿ ಹೊಂದಿರಬೇಕು. ಎನ್ಎಸ್ಎಸ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು” ಎಂದು ಹೇಳಿದರು.
ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಬದುಕು ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದ್ದು, ಅವರು ಪ್ರತಿಪಾದಿಸಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ” ಎಂದರು.
ಈ ಸುದ್ದಿ ಓದಿದ್ದೀರಾ? ತುಮಕೂರು ದಸರಾ ಆಚರಣೆ ಮೂಲಕ ಹೊಸ ಚರಿತ್ರೆ ಸೃಷ್ಟಿ: ಗೃಹ ಸಚಿವ ಪರಮೇಶ್ವರ
ಇದೇ ಸಂದರ್ಭದಲ್ಲಿ ಅವರು ಗಾಂಧೀಜಿ ಮತ್ತು ಸ್ವಾತಂತ್ರ್ಯ ಹೋರಾಟ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಅಲ್ಲದೇ ಗಾಂಧೀಜಿ ಕುರಿತ ಕವನ ವಾಚಿಸಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಎಚ್ ಎಂ ಚಂದ್ರಶೇಖರ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.