ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮುಂದಿಟ್ಟು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಮುಖಂಡರ ಜೊತೆ ಮುಖ್ಯಮಂತ್ರಿ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, “ಹೆಚ್ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ವರದಿ ಕೊಡಲು ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ಸಮಯ ನಿಗದಿ ಮಾಡಿದ್ದರು. ಆದರೆ ಕುಮಾರಸ್ವಾಮಿ ವರದಿ ತೆಗೆದುಕೊಳ್ಳಲಿಲ್ಲ. ಈಗ ನಮ್ಮ ಅವಧಿಯಲ್ಲಿ ವರದಿ ಜಾರಿಗೆ ಮನವಿ ಮಾಡಿದ್ದಾರೆ” ಎಂದರು.
ಕಾಂತರಾಜು ಅವರ ಬಳಿಕ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ. ವರದಿ ಜಾರಿಗೆ ಒತ್ತಾಯ ಇದೆ. ವಾರದ ಹಿಂದೆ ವರದಿ ಜಾರಿ ಮಾಡುವ ಬಗ್ಗೆ ಮಾತನಾಡಿದ್ದೆ. ಇಂದಿನ ಸಭೆಯಲ್ಲಿ ಭಾಗವಹಿಸಿ ಹಿಂದುಳಿದ ವರ್ಗಗಳ ನಾಯಕರು ಪಕ್ಷಾತೀತವಾಗಿ ಜಾತಿಗಣತಿ ವರದಿಯ ಜಾರಿಗೆ ಒತ್ತಾಯಿಸಿದ್ದಾರೆ. ಅ.10ರಂದು ನಡೆಯುವ ಸಂಪುಟ ಸಭೆಯ ಬದಲು ಅ.18ರ ಸಂಪುಟ ಸಭೆ ಮುಂದೆ ತಂದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಹೇಳಿದರು.
ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿ, “ಸಚಿವ ಸಂಪುಟ ಸಭೆ ಏನು ಹೇಳುತ್ತದೆಯೋ ಹಾಗೆ ಮಾಡುತ್ತೇವೆ. ಸಂಪುಟ ಸಭೆಯ ನಿರ್ಣಯದ ಪ್ರಕಾರ ಮುಂದಿನ ನಿರ್ಧಾರ” ಇರಲಿದೆ ಎಂದರು.
“ಇದು ಹಿಂದುಳಿದ ವರ್ಗಗಳ ಸಮೀಕ್ಷೆ ಮಾತ್ರ ಅಲ್ಲ. ಏಳು ಕೋಟಿ ಜನರ ಸಮೀಕ್ಷೆ. ದೇಶದಲ್ಲಿ ಮೊದಲ ಬಾರಿಗೆ ಇಂಥ ಸಮೀಕ್ಷೆ ರಾಜ್ಯದಲ್ಲಿ ನಡೆದಿದೆ. ನಾನು ಈ ವರದಿ ನೋಡಿಲ್ಲ, ಓದಿಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದರು.