- ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ: ತುಷಾರ್ ಗಿರಿನಾಥ್
- ಮೇ 13ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ
ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ ಕಾರ್ಯವು 4 ನಾನಾ ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ನಾಲ್ಕು ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ರವರು ತಿಳಿಸಿದರು.
ನಗರದಲ್ಲಿರುವ ಸೆಂ. ಜೋಸೆಫ್ ಇಂಡಿಯನ್ ಹೈಸ್ಕೂಲ್ ನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ” ಎಂದು ಹೇಳಿದರು.
ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್ ರವರು ಮಾತನಾಡಿ, “ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 13 ರಂದು ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಟೇಬಲ್ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರುತ್ತದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ನಮ್ಮ ಸಂವಿಧಾನ ನೀಡಿರುವ ಮತದಾನದ ಅಧಿಕಾರವನ್ನು ಮಹಿಳೆಯರು ಚಲಾಯಿಸಬೇಕು: ಶಾಲಿನಿ ರಜನೀಶ್
“ಮೇ 12 ರಂದು, ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ಮತ್ತೊಂದು ಬಾರಿ ತರಬೇತಿ ನೀಡಲಾಗುವುದು. ಎಲ್ಲ ಕಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿದ್ದು, ಮೂರು ಹಂತದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದರು.
“ಬೆಂಗಳೂರು ನಗರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಯಲಹಂಕ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ 2 ಬ್ಯಾಲೆಟ್ ಯುನಿಟ್ಗಳು ಬರಲಿವೆ. ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 1 ಬ್ಯಾಲೆಟ್ ಯುನಿಟ್ಗಳು ಬರಲಿವೆ” ಎಂದು ತಿಳಿಸಿದರು.