ಉಡುಪಿ ನಗರದ ಹಳೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ.
ಉಡುಪಿ ಹಳೆ ಕೆಎಸ್ಆರ್ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತನೇ ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.

ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಇದನ್ನು ಓದಿದ್ದೀರಾ? ಮಳೆ ಸುರಿದಷ್ಟು ಅಧಿಕಾರಸ್ಥರ ಜೇಬಲ್ಲಿ ಹಣದ ಹೊಳೆ; ಬೆಂಗಳೂರು ನಿವಾಸಿಗಳಿಗೆ ತಪ್ಪದ ನರಕ!
ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ತಂಡದ ನೆರವಿನಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


