ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ (ಎಸ್ಎಸ್ವಿಎಂ) ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಲೋಕಾಯುಕ್ತದ ವಿಶೇಷ ತನಿಖಾ ತಂಡ (ಎಸ್ಐಟಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ಎಚ್ ಡಿ ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್ಐಟಿ ತನಿಖೆ ನಡೆಸುತ್ತಿದೆ. 2015ರ ಆಗಸ್ಟ್ನಲ್ಲಿ ಕುಮಾರಸ್ವಾಮಿ ಅವರು ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರಿಂದ ಬಿಡುಗಡೆಯಾಗಿದ್ದರು.
ಕುಮಾರಸ್ವಾಮಿಗೆ ನೀಡಿರುವ 2015ರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣದ ಸಂಬಂಧಿಸಿದ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ
ತನಿಖೆಯನ್ನು ಕುಂಠಿತಗೊಳಿಸುವ ಉದ್ದೇಶದಿಂದ ಆರೋಪಿ ಕುಮಾರಸ್ವಾಮಿ ಅವರು ರಾಜ್ಯಪಾಲರು ಮತ್ತು ಎಸ್ಐಟಿ ನಡುವಿನ ಸಂವಹನವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಇದು ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಮತ್ತು ಪ್ರಾಸಿಕ್ಯೂಷನ್ ಸಾಕ್ಷಿ ಮತ್ತು ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತದೆ ಎಂದು ಎಸ್ಐಟಿ ಅರ್ಜಿಯಲ್ಲಿ ತಿಳಿಸಿದೆ.
ಈ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು, ಕುಮಾರಸ್ವಾಮಿ ಅವರ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ರಾಜ್ಯಪಾಲರ ಅನುಮತಿ ಕೋರಿದ್ದಾರೆ. ರಾಜ್ಯಪಾಲರ ಕಚೇರಿಯು ಕೆಲವು ಸ್ಪಷ್ಟನೆಗಳನ್ನು ಕೋರಿದೆ. ಪುನಃ ಪ್ರಸ್ತಾವವನ್ನು ಸಲ್ಲಿಸಿರುವ ಎಸ್ಐಟಿ ಅಧಿಕಾರಿಗಳು, ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿದ್ದಾರೆ.
ನವೆಂಬರ್ 21, 2023 ರಂದು ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಎಸ್ಐಟಿ ರಾಜ್ಯಪಾಲರಿಗೆ ಪತ್ರ ಬರೆದಿತ್ತು. ತನಿಖೆಯ ಎಸ್ಐಟಿಯ ಉಸ್ತುವಾರಿಯಾಗಿರುವ ಎಡಿಜಿಪಿ ಎಂ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಇತ್ತೀಚೆಗೆ ಹಲವು ಆರೋಪಗಳನ್ನು ಮಾಡಿದ್ದರು.