ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯ ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
ಗುರುವಾರ (ಅ.24) ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. 1693 ಮತಗಳ ಅಂತರದೊಂದಿಗೆ ಕಿಶೋರ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ಹಾಗೂ ಪಕ್ಷೇತರ ಅಭ್ಯರ್ಥಿ ದಿನಕರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.
ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.