ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಪಡೆದಿರುವ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ(ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.
ನ್ಯಾಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಇ.ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿತು. ವಿಚಾರಣೆ ವೇಳೆ ಇ.ಡಿ ಪರ ಹಾಜರಿದ್ದ ಸಹಾಯಕ ಎಸ್.ವಿ.ರಾಜು ಮತ್ತು ಪಿ. ಪ್ರಸನ್ನಕುಮಾರ್, ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.
ವಾದ ಆಲಿಸಿದ ನ್ಯಾಯಪೀಠ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದಾಗ ಪ್ರತಿವಾದಿಗಳ (ನಾಗೇಂದ್ರ) ವಾದ ಆಲಿಸದೆ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ತುರ್ತು ನೋಟಿಸ್ ಜಾರಿ ಮಾಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿತು.
ಈ ಪ್ರಕರಣದಲ್ಲಿ ನಾಗೇಂದ್ರ ಮೊದಲ ಆರೋಪಿಯಾದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಇತ್ತೀಚೆಗಷ್ಟೇ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ನೀಡಿದ್ದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್ಟಿಡಿಸಿಎಲ್) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ.ಗಳ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವನ್ನು ಬಿ ನಾಗೇಂದ್ರ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಸಾಕಷ್ಟು ಸಾಕ್ಷ್ಯಗಳನ್ನು ತನಿಖೆ ವೇಳೆ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) 144 ಪುಟಗಳ ದೂರನ್ನು ಸಲ್ಲಿಸಿತ್ತು. ದೂರಿನನ್ವಯ, ಪಿಎಂಎಲ್ಎ ಕಾಯ್ದೆಯ ಕಲಂ 3 ಮತ್ತು 4ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ 4,970 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.