ಅಪಘಾತದಲ್ಲಿ ಸಾವನ್ನಪ್ಪಿದ ಐಡಿಎಸ್ ಎಂಟಿ ಬಡಾವಣೆಯ ಯುವಕ ಮೊಹಮ್ಮದ್ ಕಬೀರ್ ಪಾಷಾ ಅವರ ಸ್ಮರಣಾರ್ಥ ಅಂಗವಾಗಿ ಕಬೀರ್ ಕುಟುಂಬಸ್ಥರು ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಜಾಗೃತಿ ಮೂಡಿಸಿದರು.
ರಾಯಚೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಕಬೀರ್ ಕುಟುಂಬಸ್ಥರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಚಾಲನೆ ನೀಡಿದರು.
ಮಹಿಳೆಯರಿಗೆ, ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ಮೊದಲ ಆದ್ಯತೆಯ ನೀಡಿ ಸಾರ್ವಜನಿಕರಿಗೆ ಉಚಿತವಾಗಿ 150ಕ್ಕೂ ಹೆಚ್ಚು ಹೆಲ್ಮೆಟ್ ವಿತರಣೆ ಮಾಡಲಾಯಿತು.
ʼಕಳೆದ ಜುಲೈ 23ರಂದು ರಸ್ತೆ ಅಪಘಾತದಲ್ಲಿ ಕಬೀರ್ ಸಾವನ್ನಪ್ಪಿದ್ದರು, ಬಹುಶಃ ಅವರು ಹೆಲ್ಮೆಟ್ ಧರಿಸಿದ್ದರೆ ಜೀವ ಉಳಿಯಬಹುದಿತ್ತು. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಅಮೂಲ್ಯವಾದ ಜೀವ ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಉಚಿತವಾಗಿ ಹೆಲ್ಮೆಟ್ ವಿತರಣೆ ಮಾಡಿದ್ದೇವೆʼ ಎಂದು ಕಬೀರ್ ತಂದೆ ಮನ್ಜೂರ್ ಪಾಶಾ ತಿಳಿಸಿದರು.
ಇದೇ ವೇಳೆ ಜಿಲ್ಲಾಡಳಿತದಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿ ಮಾತನಾಡಿ, ʼದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಕುಳಿತವರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕು ಎಂದು ಈಗಾಗಲೇ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಪ್ರಾಣ ರಕ್ಷಣೆಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕುʼ ಎಂದು ಸಲಹೆ ನೀಡಿದರು.
ʼಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರಿಂದ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ತಮ್ಮ ಮಗನ ನೆನಪಿಗಾಗಿ ಕಬೀರ್ ಪಾಷಾ ಅವರು ಹೆಲ್ಮೆಟ್ ಉಚಿತವಾಗಿ ಜನರಿಗೆ ಕೊಡುತ್ತಿರುವುದು ಶ್ಲಾಘನೀಯʼ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ಮಾತನಾಡಿ, ʼಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಿಂದ ಹೆಲ್ಮೆಟ್ ಕಡ್ಡಾಯ ಇರಲಿಲ್ಲ. ಆದರೆ, ಅಪಘಾತಗಳಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕರಿಸಬೇಕುʼ ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆಸ್ತಿಗಾಗಿ ಕಿರುಕುಳ ಆರೋಪ : ವಿಷ ಸೇವಿಸಿದ ಯುವಕ ಸಾವು
ಈ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ ಕೆ., ಕಾಂಗ್ರೆಸ್ ಮುಖಂಡರಾದ ಕೆ.ಅಸ್ಲಾಪಾಷಾ, ರುಡಾ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ನಗರಸಭೆಯ ಉಪಾಧ್ಯಕ್ಷ ಸಾಜೀದ್ ಸಮೀರ್, ಕಲಾ ಸಂಕುಲ ಸಂಸ್ಥೆಯ ಮಾರುತಿ ಬಡಿಗೇರ್, ಅಪ್ಪು ಯೂತ್ ಬ್ರಿಗೆಡ್ ಅಧ್ಯಕ್ಷ ಸಾದೀಕ್ ಖಾನ್ ಯರಗೇರಾ ಉಪಸ್ಥಿತರಿದ್ದರು.
